ರಾಯಚೂರು: ‘ಪಂಚಾಯಿತಿ ನೌಕರರ ಸಮಸ್ಯೆಗಳಿಗೆ ಜಿಲ್ಲಾ ಪಂಚಾಯಿತಿಮಟ್ಟದಲ್ಲಿ ಕೈಗೊಳ್ಳಲು ಸಾಧ್ಯವಿರುವ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಭರವಸೆ ನೀಡಿದರು.
ಇಲ್ಲಿಯ ಜಿಲ್ಲಾ ಪಂಚಾಯಿತಿಯ ಜಲನಿರ್ಮಲ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಕರವಸೂಲಿಗಾರರು, ವಾಟರ್ಮನ್, ಜವಾನ, ಸಿಪಾಯಿ, ಸ್ವಚ್ಛತಾಗಾರ, ನೌಕರರ ಕುಂದುಕೊರತೆಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಕೆಲವು ತೀರ್ಮಾನಗಳನ್ನು ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬೇಕಾಗುತ್ತದೆ. ಆದರೆ, ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಸಾಧ್ಯವಿರುವ ಸಮಸ್ಯೆಗಳನ್ನು ಪರಿಹರಿಸಲಾಗುವುದು’ ಎಂದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ ಮಾತನಾಡಿ, ‘ಪಂಚಾಯಿತಿ ಸಿಬ್ಬಂದಿ ಸಮಸ್ಯೆಗಳನ್ನು ಲಿಖಿತವಾಗಿ ತಿಳಿಸಬಹುದು. ನಮ್ಮ ಹಂತದಲ್ಲಿ ಸಾಧ್ಯವಿರುವ ಸಮಸ್ಯೆಗಳಿಗೆ ಪ್ರಾಥಮಿಕ ಹಂತದಲ್ಲೇ ಇತ್ಯರ್ಥಗೊಳಿಸಲಾಗುವುದು’ ಎಂದರು.
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಂಘದ ರಾಜ್ಯ ಘಟಕದ ಅಧ್ಯಕ್ಷ ಭೀಮರೆಡ್ಡಿ ಪಾಟೀಲ ಮಾತನಾಡಿ, ‘ಜಿಲ್ಲೆಯಲ್ಲಿ ಬಾಕಿ ಇರುವ ಡಾಟಾ ಎಂಟ್ರಿ ಆಪರೇಟರ್ಗಳಿಗೆ(ಡಿಇಒ) ಅನುಮೋದನೆ ನೀಡಬೇಕು. ಬಾಕಿ ವೇತನ ಬಿಡುಗಡೆ ಮಾಡಬೇಕು. ವರ್ಗಾವಣೆಗೆ ಅವಕಾಶ ಕೊಡಬೇಕು. ರಜೆ ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹಾಕಬಾರದು’ ಎಂದು ಮನವಿ ಮಾಡಿದರು.
ಕರ ವಸೂಲಿಗಾರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, ‘ಸಿಬ್ಬಂದಿ ಬಾಕಿ ವೇತನ ಬಿಡುಗಡೆ ಮಾಡಬೇಕು. ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಬೇಕು’ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಮೌನೇಶ ಮಟ್ಟರು, ಗುರುಪ್ರಸಾದ ಮಾತನಾಡಿದರು.
ಕರವಸೂಲಿಗಾರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಂಬಯ್ಯ, ಡಿಇಒ ಸಂಘದ ಲಿಂಗಸುಗೂರು ತಾಲ್ಲೂಕು ಘಟಕದ ಅಧ್ಯಕ್ಷ ಬಸವಾರಜ, ದೇವದುರ್ಗ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಜಾನಪ್ಪ, ಸಿರವಾರ ತಾಲ್ಲೂಕು ಘಟಕದ ಅಧ್ಯಕ್ಷ ಆಶಣ್ಣ, ಕೃಷ್ಣ, ಬಸವರಾಜ್ ಉಪಸ್ಥಿತರಿದ್ದರು.