ಲಿಂಗಸುಗೂರು: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ. ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ದೇಶದ ಆಹಾರ ಉತ್ಪಾದನೆ ಹೆಚ್ಚಳಕ್ಕೆ ಸಹಕರಿಸಬೇಕು’ ಎಂದು ಹಟ್ಟಿ ಚಿನ್ನದ ಗಣಿ ಆಡಳಿತ ಮಂಡಳಿ ಅಧ್ಯಕ್ಷ ಮಾನಪ್ಪ ವಜ್ಜಲ ಮನವಿ ಮಾಡಿದರು.
ಸೋಮವಾರ ಕೃಷಿ ಅಭಿಯಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ರೈತ ಸಮೂಹದ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಆಗುವಂಥ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇಲಾಖೆಗಳು ಸೌಲಭ್ಯಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ಇಂಥ ಅಭಿಯಾನಗಳು ಸಹಕಾರಿ ಆಗಲಿವೆ’ ಎಂದು ಇಲಾಖೆ ಕಾರ್ಯ ಶ್ಲಾಘಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್ಲ, ಮುಖಂಡರಾದ ಡಾ. ಶಿವಬಸಪ್ಪ ಹೆಸರೂರು, ಶಂಕರಗೌಡ ಬಳಗಾನೂರ, ಪರಶುರಾಮ ನಗನೂರ. ಕೃಷಿ ಇಲಾಖೆ ಉಪ ನಿರ್ದೇಶಕಿ ಸರಸ್ವತಿ ಹಾಗೂ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಇದ್ದರು.