ರಾಯಚೂರು: ಮಹಾಮಾರಿ ಎಚ್ಐವಿ, ಏಡ್ಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ನ್ಯಾಯವಾದಿಗಳ ಸಂಘ, ವೈದ್ಯಕೀಯ ಸಂಘ, ರಿಮ್ಸ್ ಬೋಧಕ ಆಸ್ಪತ್ರೆ ಹಾಗೂ ವಿವಿಧ ಮೆಡಿಕಲ್ ಕಾಲೇಜು, ಸಂಘ ಸಂಸ್ಥೆಗಳಿಂದ ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಮಂಗಳವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಪೂರ್ವ ಮಾತನಾಡಿದರು.
ಏಡ್ಸ್ ಸೋಂಕಿತರು ಗುಣಮುಖರಾಗಲು ಔಷಧಿ ಕಂಡುಹಿಡಿಯಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು. ರಾಜ್ಯದಲ್ಲಿ ಜಿಲ್ಲೆಯು ಏಡ್ಸ್ ನಿಯಂತ್ರಿಸುವಲ್ಲಿ 4ನೇ ಸ್ಥಾನದಲ್ಲಿದೆ. ಏಡ್ಸ್ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಮಾತ್ರ ಸೋಂಕು ಹರಡುತ್ತದೆ ಎಂದು ತಿಳಿಸಿದರು.
ಅನಕ್ಷರಸ್ಥ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ, ಯುವತಿಯರು ಮಹಾಮಾರಿ ಸೋಂಕಿಗೆ ಬಲಿಯಾಗುತ್ತಿರುವುದು ಕಳವಳದಾಯಕ ಸಂಗತಿ. ಎಚ್ಐವಿ ಸೋಂಕಿತರನ್ನು ಕೀಳಾಗಿ ನೋಡದೆ ಅವರಲ್ಲಿ ಅತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂದಿನ ಆಧುನಿಕ ಯುಗದಲ್ಲಿ ಏಡ್ಸ್ ಸೋಂಕಿತರನ್ನು ಸಮಾಜದಲ್ಲಿ ನೋಡುವ ದೃಷ್ಟಿಕೋನ ಬದಲಾದಾಗ ಮಾತ್ರ ಸೋಂಕಿನಿಂದ ಬೇಗ ಗುಣಮುಖರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾದ ಜಾಥಾವು ನಗರದ ವಿವಿಧ ವೃತಗಳಾದ ಗಾಂಧಿ ವೃತ್ತ, ಮಹಾವೀರ ವೃತ್ತ, ಸೂಪರ್ ಮಾರ್ಕೆಟ್ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಗೆ ಬಂದು ತಲುಪಿತು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಸಿ.ನಾಡಗೌಡ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ, ರಿಮ್ಸ್ ನಿರ್ದೇಶಕ ಬಸವರಾಜ ಪೀರಾಪುರ, ರಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಕುಟುಂಬ ಕಲ್ಯಣಾಧಿಕಾರಿ ಡಾ.ಲಕ್ಷ್ಮೀಬಾಯಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ವೆಂಕಟೇಶ ನಾಯಕ, ತಹಶೀಲ್ದಾರ್ ಡಾ.ಹಂಪಣ್ಣ, ಮಲೇರಿಯಾ ಅಧಿಕಾರಿ ಡಾ.ಗಣೇಶ, ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾಕೀರ್, ಡಾ.ಕೆ.ನಾಗರಾಜ, ಅತಾವುಲ್ಲಾ ವಕೀಲರು, ಶ್ರೀನಿವಾಸ ರಾಯಚೂರಕರ್, ದಂಡಪ್ಪ ಬಿರಾದಾರ್, ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ವಿವಿಧ ಕಾಲೇಜು ವಿದ್ಯಾರ್ಥಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.