ಉಸ್ತುವಾರಿ ಸಚಿವರ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತ: ಹನುಮಂತಪ್ಪ ಆಲ್ಕೋಡ್

ಸಿರವಾರ: ‘ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯದಿಂದಾಗಿ ಅಧಿಕಾರಿಗಳಿಗೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದು, ಇದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ‘ ಎಂದು ಮಾಜಿ ಶಾಸಕ ಹನುಮಂತಪ್ಪ ಆಲ್ಕೋಡ್ ಆರೋಪಿಸಿದರು.
ಪಟ್ಟಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನೆಪವೊಡ್ಡಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಇದರಿಂದ ಜಿಲ್ಲಾಡಳಿತಕ್ಕೆ ತುಕ್ಕು ಹಿಡಿದಂತಾಗಿದೆ. ಆಗೊಮ್ಮೆ ಹೀಗೊಮ್ಮೆ ಜಿಲ್ಲೆಗೆ ಬರುವ ಉಸ್ತುವಾರಿ ಸಚಿವರಿಂದ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಿಸುವುದು ಸಾಧ್ಯವೇ ಎಂದು ಪ್ರಶ್ನಿಸಿದರು.
ಜಿಲ್ಲೆ ನಡೆಯುತ್ತಿರುವ 9ಎ ಕಾಲುವೆ ಸೇರಿದಂತೆ ನೀರಾವರಿ ಕಾಮಗಾರಿಗಳಿಗೆ ಯಾವುದೇ ಟೆಂಡರ್ ಇಲ್ಲದ ಕಾರಣ ಕಳಪೆ, ಅಕ್ರಮವಾಗಿ ನಡೆಯುತ್ತಿದ್ದು ಸ್ಥಳೀಯ ಜನಪ್ರತಿನಿಧಿಗಳು ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಹಣ ಪಡೆದು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯ ಅಂಗನವಾಡಿ ಮಕ್ಕಳ, ಶಾಲಾ ಮಕ್ಕಳಿಗೆ ನೀಡುವ ಆಹಾರ ಧಾನ್ಯ, ಮೊಟ್ಟೆಯನ್ನು ಕಸಿದುಕೊಂಡು ಅನ್ನ ದಾಸೋಹ ನಡೆಸುವ ಹಂತಕ್ಕೆ ವ್ಯವಸ್ಥೆ ತಲುಪಿದೆ.
ಮುಂದಾದರೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಸಿ ರೂಂ ಗಳಿಂದ ಹೊರಬಂದು ಸಾರ್ವಜನಿಕರಿಗೆ ಸೇವೆ ಮಾಡಬೇಕಾಗಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಎಂ.ಪ್ರಕಾಶಪ್ಪ, ಪರಶುರಾಮ ಸರೋದೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.