ರಾಯಚೂರು: ಗ್ರಾಮ ಪಂಚಾಯಿತಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವುದಕ್ಕಾಗಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ( ಎಐಯುಟಿಯುಸಿ ಸಂಯೋಜಿತ) ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.
ಪ್ರಸ್ತುತ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತರಿಗೆ ನಾಮಪತ್ರ ಸಲ್ಲಿಕೆ ವಿವಿಧ ತರಬೇತಿ ಹಾಗೂ ಮತದಾನದ ದಿನದಂದು ಸ್ಯಾನಿಟೈಸಿಂಗ್, ಥರ್ಮಲ್ ಸ್ಕ್ಯಾನಿಂಗ್ ಹಾಗೂ ಇತರೆ ಕಾರ್ಯಗಳಿಗೆ ನಿಯೋಜಿಸಿಕೊಂಡಿದ್ದು ಯಾವುದೇ ಗೌರವಧನ ನೀಡಿಲ್ಲ ಎಂದು ದೂರಿದರು.
ಪ್ರತಿದಿನಕ್ಕೆ ಒಬ್ಬ ಆಶಾ ಕಾರ್ಯಕರ್ತೆಗೆ ₹700 ನೀಡಬೇಕೆಂಬ ಆದೇಶವಿದೆ. ಮತದಾನ ಮುಗಿದ ಬಳಿಕ ಎಲ್ಲಾ ಸಿಬ್ಬಂದಿಗೂ ಅವರವರ ಕರ್ತವ್ಯಕ್ಕೆ ಸಂಬಂಧಿಸಿದಂತೆ ಭತ್ಯೆಯನ್ನು ನೀಡಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರಿಗೆ ಮಾತ್ರ ಯಾವುದೇ ಗೌರವಧನವನ್ನು ನೀಡಿಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದರೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಚುನಾವಣೆಯ ಕಾರ್ಯಗಳಲ್ಲಿ ದುಡಿದ ಆಶಾ ಕಾರ್ಯಕರ್ತೆಯರಿಗೆ ಸಲ್ಲಬೇಕಾದ ಗೌರವ ಹಾಗೂ ಗೌರವಧನವನ್ನು ಕೂಡಲೇ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ವೀರೇಶ ಎನ್.ಎಸ್, ಜಿಲ್ಲಾ ಕಾರ್ಯದರ್ಶಿ ಈರಮ್ಮ, ಅಣ್ಣಪ್ಪ, ಶಂಕ್ರಮ್ಮ, ಸುನಂದ, ಮೀನಾಕ್ಷಿ ಇದ್ದರು.