ರಾಯಚೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ಗೌರವಧನ ಖಾತರಿಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ ಸಂಯೋಜಿತ)ದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.
ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ತಡೆದರು. ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಕೋವಿಡ್– 19 ವಿರುದ್ಧ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು ಮುಂಚೂಣಿಯಲ್ಲಿದ್ದು, ತಮ್ಮ ಜೀವ ಪಣಕಿಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಅಗತ್ಯ ಸುರಕ್ಷತಾ ಸಾಮಾಗ್ರಿಗಳು ನೀಡುತ್ತಿಲ್ಲ ಹಾಗೂ ಅವರ ಸೇವೆಗೆ ಸಮರ್ಪಕ ವೇತನ ಸಿಗುತ್ತಿಲ್ಲ ಎಂದು ದೂರಿದರು.
ಕೋವಿಡ್–19 ನಿಂದ ರಕ್ಷಣೆಗೆ ಅಗತ್ಯ ಪ್ರಮಾಣದಲ್ಲಿ ಸುರಕ್ಷತಾ ಸಾಮಾಗ್ರಿಗಳನ್ನು ನೀಡಬೇಕು ಹಾಗೂ ಕೋವಿಡ್ಗೆ ತುತ್ತಾದ ಆಶಾಗೆ ಪರಿಹಾರ ಮತ್ತು ಉಚಿತ ಚಿಕಿತ್ಸೆ ನೀಡಬೇಕು ಎಂದು ರಾಜ್ಯಾದಾದ್ಯಂತ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟ ಹೋರಾಟ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯೆ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಕೂಡಲೇ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಅಧ್ಯಕ್ಷ ವೀರೇಶ ಎನ್. ಎಸ್, ಕಾರ್ಯದರ್ಶಿ ಈರಮ್ಮ, ಮಹೇಶ ಚೀಕಲಪರ್ವಿ, ಸಾಜಿದಾ ಬೇಗಂ, ರಾಧಮ್ಮ, ವೀರಮ್ಮ, ಲಕ್ಷ್ಮೀ ಜೆಗರಕಲ್, ಸುಜಾತಾ, ಜುಲೇಖಾ, ರಾಘಮ್ಮ, ಶಾರದಾ, ನಾಗಮ್ಮ, ಚೈತ್ರ ಇದ್ದರು