ಬೆಂಗಳೂರು: ‘ಕೇರಳದ ತಲಚ್ಚೇರಿಯಿಂದ ಮೈಸೂರಿಗೆ ವಿರಾಜಪೇಟೆ ಮಾರ್ಗವಾಗಿ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಸ್ಪಷ್ಟಪಡಿಸಿದರು.
ವಿಧಾನಸಭೆಯಲ್ಲಿ ಬಿಜೆಪಿಯ ಕೆ.ಜಿ. ಬೋಪಯ್ಯ ಪ್ರಶ್ನೆಗೆ ಬುಧವಾರ ಉತ್ತರಿಸಿದ ಅವರು, ‘ಕೊಡಗಿನಲ್ಲಿ ಆನೆ ಕಾರಿಡಾರ್ ಹಾದು ಹೋಗುವುದರಿಂದ ರೈಲ್ವೆ ಯೋಜನೆ ಅನುಷ್ಠಾನಗೊಂಡರೆ ವನ್ಯಜೀವಿಗಳಿಗೆ ಮತ್ತು ಪರಿಸರಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ’ ಎಂದರು.
‘ಕೊಡಗಿನಲ್ಲಿ ರೈಲ್ವೆ ಯೋಜನೆ ಕೈಗೆತ್ತಿಕೊಳ್ಳಲು ಅಲ್ಲಿನ ಜನರ ವಿರೋಧವಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸ್ಥಳೀಯರ ಭಾವನೆಗಳಿಗೆ ಸ್ಪಂದಿಸಲಾಗುವುದು’ಎಂದರು.
‘ರೈಲ್ವೆ ಯೋಜನೆ ಕೈಗೆತ್ತಿಕೊಳ್ಳುವ ಸಂಬಂಧ ಸಭೆಗಳು ನಡೆದಿವೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ’ ಎಂದು ಬೋಪಯ್ಯ ಹೇಳಿದಾಗ, ‘ಸಭೆಯಲ್ಲಿ ಪಾಲ್ಗೊಂಡಿರಬಹುದು. ಹಾಗೆಂದ ಮಾತ್ರಕ್ಕೆ ಯೋಜನೆಗೆ ಒಪ್ಪಿಗೆ ನೀಡಿದ್ದೇವೆ ಎಂದಲ್ಲ’ ಎಂದರು.