ರಾಯಚೂರು: ನಗರದ ಗೋಶಾಲೆ ರಸ್ತೆ, ಗಂಜ್ ಏರಿಯಾ, ಆಟೋ ನಗರ ಮತ್ತು ಪೂರ್ಣಿಮ ಟಾಕೀಸ್ ರಸ್ತೆಯಲ್ಲಿರುವ ಅಂಗಡಿಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಬುಧವಾರ ಜಾಗೃತಿ ಮೂಡಿಸಲಾಯಿತು.
ಅಂಗಡಿಗಳು, ವಾಣಿಜ್ಯ ಮಳಿಗೆಗಳು ಹಾಗೂ ಇನ್ನಿತರೆಡೆ ಬಾಲ ಕಾರ್ಮಿಕ ನಿಷೇಧ ಕಾಯ್ದೆಯ ಮಾಹಿತಿಯುಳ್ಳ ಕರಪತ್ರ, ಸ್ಟೀಕರ್ಸ್ ಮತ್ತು ಪೋಸ್ಟರ್ಗಳನ್ನು ಅಂಟಿಸುವ ಮೂಲಕ ಹಾಗೂ ಧ್ವನಿವರ್ಧಕಗಳ ಮೂಲಕ ಬಾಲ ಕಾರ್ಮಿಕ ಮತ್ತು ಕಿಶೋರ್ ಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಒಂದು ವೇಳೆ ದುಡಿಸಿಕೊಂಡಲ್ಲಿ ₹50 ಸಾವಿರ ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಜಿಲ್ಲಾ ಕಾರ್ಮಿಕ ಅಧಿಕಾರಿ ನಾಜೀಯಾ ಸುಲ್ತಾನ, ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ, ಕಾರ್ಮಿಕ ನಿರೀಕ್ಷಕ ಎನ್. ವೆಂಕಟಸ್ವಾಮಿ, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಪ್ರೋಗ್ರಾಮ್ ಮ್ಯಾನೇಜರ್ ರವಿಕುಮಾರ, ತಾಯರಾಜ್ ಪಾಲ್ಗೊಂಡಿದ್ದರು.