ರಾಯಚೂರು: ‘ಇದು ಮಸ್ಕಿ ಕ್ಷೇತ್ರದ ಜನರ ಗೆಲುವಾಗಿದೆ’ ಎಂದು ಉಪಚುನಾವಣೆಯಲ್ಲಿ ಜಯ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ನಗರದ ಎಸ್ಆರ್ಪಿಎಸ್ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಫಲಿತಾಂಶದ ಬಳಿಕ ಸುದ್ದಿಗಾರರಿಗೆಪ್ರತಿಕ್ರಿಯೆ ನೀಡಿದರು.
ರಾಜ್ಯದಲ್ಲಿ ಬಿಜೆಪಿ ಆಡಳಿತರೂಢ ಪಕ್ಷ, ಮುಖ್ಯಮಂತ್ರಿ, ಸಚಿವರು ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಜನರಿಗೆ ಹಣ, ಅಧಿಕಾರ, ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಕ್ಷೇತ್ರದ ಮತದಾರರು ಸ್ವಾಭಿಮಾನವನ್ನು ಬೆಂಬಲಿಸಿದ್ದಾರೆ ಎಂದರು.
ತಾವೇ ಅಭ್ಯರ್ಥಿ ಎಂದು ಭಾವಿಸಿ ಮತನೀಡಿದ್ದಾರೆ. ನೆಪಪಾತ್ರಕ್ಕೆ ನಾನು ಅಭ್ಯರ್ಥಿಯಾಗಿದ್ದು, ಇದು ಮತದಾರರ ಗೆಲುವಾಗಿದೆ. ಜನ ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದೇನೆ.ಹಿಂದೆ ನಡೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲಿಸಿದ್ದ ಜನರು ಈ ಬಾರಿ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು.
ಜನರ ನಂಬಿಕೆಗೆ ಅನುಗುಣವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕಾಂಗ್ರೆಸ್ ಪಕ್ಷದ ನಾಯಕರು, ಸ್ಥಳೀಯ ಮುಖಂಡರು, ಕಾರ್ಯಕರ್ತರ ಸಂಘಟಿತ ಪರಿಶ್ರಮದಿಂದಾಗಿ ಗೆಲವು ಸಾಧ್ಯವಾಗಿದೆ ಎಂದು ತಿಳಿಸಿದರು.