ರಾಯಚೂರು: ಮಡಿವಾಳರ ರಾಜ್ಯಮಟ್ಟದ ಜಾಗೃತಿ ಸಮ್ಮೇಳನ ಹಾಗೂ ಬಸವ ಮಾಚಿದೇವ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವವನ್ನು ಜನವರಿ 6ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಅಧ್ಯಕ್ಷ ಜಿ.ಸುರೇಶ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷಾಂತರ ಜನರು ಭಾಗವಹಿಸಲಿರುವ ಈ ಸಮ್ಮೇಳನವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ, ಸಿದ್ದರಾಮಯ್ಯ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.
ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಇಂದಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಮಡಿವಾಳರನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂಬ ಬೇಡಿಕೆ ರಾಜ್ಯ ಸರ್ಕಾರದ ಮಟ್ಟದಲ್ಲಿಯೇ ಉಳಿದಿದೆ. ಸೌಲಭ್ಯಗಳಿಂದ ವಂಚಿತವಾಗಿರುವ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಗಣ್ಯರಿಗೆ ಮನವಿ ನೀಡಲಾಗುತ್ತದೆ ಎಂದು ತಿಳಿಸಿದರು.
ಸಮಾಜಕ್ಕೆ ಪ್ರತ್ಯೇಕವಾಗಿ ಮಾಚಿದೇವ ಮಠವನ್ನು ಸ್ಥಾಪಿಸಿ ಬಸವ ಮಾಚಿದೇವ ಸ್ವಾಮೀಜಿಗೆ ಜವಾಬ್ದಾರಿ ನೀಡಲಾಗಿದೆ. ಪಟ್ಟಾಧಿಕಾರ ಮಹೋತ್ಸವಕ್ಕೆ ಹೆಚ್ಚಿನ ಜನರು ಜಿಲ್ಲೆಯಿಂದ ತೆರಳಲು ಮನವಿ ಮಾಡಲಾಗಿದೆ ಎಂದರು.
ಜಿ.ಶಿವಮೂರ್ತಿ, ಎಸ್.ಬಿ.ವೆಂಕಟೇಶ, ಹುಸೇನಪ್ಪ, ಆಂಜನೇಯ, ಮುನಿಸ್ವಾಮಿ, ಚಂದ್ರಶೇಖರ, ಮಂಜುಳಾ, ಚಂದ್ರಪ್ಪ ಪತ್ರಿಕಾಗೋಷ್ಠಿಯಲ್ಲಿ ಇದ್ದರು.