ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿನ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಅಲ್ಲಿನ ವಿದ್ಯಾರ್ಥಿಗಳು ಗುರುವಾರ ಮಿನಿವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
‘ವಸತಿ ನಿಲಯದಲ್ಲಿ ಸರಿಯಾಗಿ ಅಡುಗೆ ನೀಡುತ್ತಿಲ್ಲ. ಅಡುಗೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ನಮ್ಮ ಮೇಲೆಯೇ ದೌರ್ಜನ್ಯ ಮಾಡುತ್ತಿದ್ದಾರೆ. ಶೌಚಾಲಯ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅಭ್ಯಾಸ ಮಾಡಲು ಗ್ರಂಥಾಲಯ ಇಲ್ಲ. ಈ ಬಗ್ಗೆ ವಾರ್ಡನ್ ಲೋಕೇಶ್ ರಾಥೋಡ್ ಮತ್ತು ತಾಲ್ಲೂಕು ಅಧಿಕಾರಿ ಲಿಂಗಪ್ಪ ಅಂಗಡಿ ಅವರ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಕೂಡಲೇ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ವಿದ್ಯಾರ್ಥಿ ಆಂಜನೇಯ ಎಚ್ಚರಿಸಿದರು.
ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಮನವಿ ಪತ್ರ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡ ನಿರುಪಾದೆಪ್ಪ ಗುಡಿಹಾಳ ವಕೀಲ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು.
ವಿದ್ಯಾರ್ಥಿಗಳಾದ ಭೀಮಣ್ಣ, ದಯಾನಂದ, ಬಸವರಾಜ, ಪರಶುರಾಮ, ಮಹಿಬೂಬ್, ದೇವರಾಜ, ಯಂಕೋಬ ಸೇರಿದಂತೆ ಹಾಸ್ಟೆಲ್ ವಿದ್ಯಾರ್ಥಿಗಳು ಇದ್ದರು.