ಸಿಂಧನೂರು: ದೇಶಭಕ್ತಿಯ ಸೋಗಿನಲ್ಲಿ ಅಧಿಕಾರಕ್ಕೆ ಬಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದುರಾಡಳಿತ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿವೆ. ಇದು ಭಾರತೀಯ ಅಲ್ಲ. ಭ್ರಷ್ಟ ಜನತಾ ಪಾರ್ಟಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದರು.
ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ರಾತ್ರಿ ಸನ್ಮಾನ ಸ್ವೀಕರಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಶೇ 40 ಪರ್ಸಂಟೇಜ್ ಕಮೀಷನ್ ಕಾರಣ ಎಂದು ಆರೋಪಿಸಿದರು.
ಸಿಎಂ ಹುದ್ದೆಯ ₹2,500 ಕೋಟಿ ಬಗ್ಗೆ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಹೇಳಿಕೆ ನೀಡಿದ್ದಾರೆ. ಈ ಹಣ ಯಾರಿಗೆ ಕೊಡಬೇಕು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದರು.
ಬಿ.ಕೆ.ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ಬಸವೇಶ್ವರರ ಮೂರ್ತಿ ನೀಡಿ ಸನ್ಮಾನಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತಕುಮಾರ, ಬ್ಲಾಕ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ.ನಾಯಕ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿ ಮಲಿಕ್ ವಕೀಲ, ನಗರಸಭಾ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಮುಖಂಡರಾದ ಎಂ.ಕಾಳಿಂಗಪ್ಪ, ಆರ್. ರಾಜಶೇಖರ ನಾರಾಯಣಪ್ಪ, ಸಿದ್ರಾ ಮಪ್ಪ ಮಾಡಶಿರವಾರ, ಡಾ.ಬಿ.ಎನ್.ಪಾಟೀಲ, ಪಿ.ಮುರುಳಿಕೃಷ್ಣ
ಇದ್ದರು.
ಭ್ರಷ್ಟಾಚಾರ; ಲೋಕಾಯುಕ್ತ ತನಿಖೆಗೆ ವಹಿಸಲು ಆಗ್ರಹ
ಲಿಂಗಸುಗೂರು: ನಾರಾಯಣಪುರ ಬಲದಂಡೆ ಮುಖ್ಯ ಹಾಗೂ ವಿತರಣಾ ನಾಲೆಗಳ ಆಧುನೀಕರಣ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಒತ್ತಾಯಿಸಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯೋಜನೆಗಳ ಅನುಷ್ಠಾನದಲ್ಲಿ ಕೋಟ್ಯಂತರ ಹಣ ದುರ್ಬಳಕೆ ಕುರಿರು ದೂರುಗಳು ಬಂದಿವೆ. ನಾಲೆಗಳ ಅಧುನೀಕರಣದಲ್ಲಿ ಮರಂ ಮತ್ತು ಕರಿಮಣ್ಣು ಬಳಕೆಯಲ್ಲಿ ಸಾವಿರಾರು ಕೋಟಿಯ ಅವ್ಯವಹಾರ ದಾಖಲೆಗಳು ಲಭ್ಯವಾಗಿವೆ. ಸದನ ಸಮಿತಿ ಸದಸ್ಯರು ಪರಶೀಲನೆ ವೇಳೆ ಗೂಂಡಾಗಿರಿ ನಡೆಸಿದ್ದು ನಾಚಿಕೆಯ ಸಂಗತಿ ಎಂದರು.
ಹಣ ದುರ್ಬಳಕೆ, ಸದನ ಸಮಿತಿ ಸದಸ್ಯರ ಮೇಲಿನ ದೌರ್ಜನ್ಯಗಳ ಕುರಿತು ಸರ್ಕಾರದ ಗಮನ ಸೆಳೆದು, ಸರ್ಕಾರ ಸ್ಪಂದಿಸದಿದ್ದರೇ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದು ಹೇಳಿದರು.
ಶಾಸಕ ಡಿ.ಎಸ್ ಹೂಲಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್ಲ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಪಾಟೀಲ, ಪುರಸಭೆ ಉಪಾಧ್ಯಕ್ಷ ಎಂ.ಡಿ ರಫಿ, ಮುಖಂಡರಾದ ಶರಣಪ್ಪ ಮೇಟಿ, ಪಾಮಯ್ಯ ಮುರಾರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.