ರಾಯಚೂರು: ರಕ್ತದಾನ ಶಿಬಿರಗಳನ್ನು ಸಂಘಟಿಸುವವರಿಗೆ ಸರ್ಕಾರದಿಂದ ಅಗತ್ಯ ನೆರವು ನೀಡುವ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ತಿಳಿಸಿದರು.
ನಗರದ ಜೆ.ಸಿ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ರೆಡ್ಕ್ರಾಸ್ ಸಂಸ್ಥೆ ಹಾಗೂ ಓಂಸಾಯಿ ಧ್ಯಾನ ಮಂದಿರದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮಾನವೀಯ ದೃಷ್ಟಿಯಿಂದ ರಕ್ತದಾನ ಅತ್ಯಂತ ಉಪಯುಕ್ತ. ಅದನ್ನು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಹಲವು ಸಂಘ ಸಂಸ್ಥೆಗಳು, ಸಂಘಟನೆಗಳು ಹಮ್ಮಿಕೊಳ್ಳುತ್ತವೆ. ಅವರಿಗೆ ಸರ್ಕಾರದಿಂದ ಅಗತ್ಯ ನೆರವು ನೀಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಶಿಬಿರಗಳಲ್ಲಿ ಭಾಗವಹಿಸಬೇಕು. ಮುಖ್ಯವಾಗಿ ಸಾರ್ವಜನಿಕರಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಹೆಚ್ಚಾಗಬೇಕು. ರಕ್ತದಾನಗಳು ಹೆಚ್ಚಾದಲ್ಲಿ ಮಾನವ ಹಾನಿ ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.
ದೇಶದಲ್ಲಿ ಕೋವಿಡ್-19 ಗಿಂತಲೂ, ಸೂಕ್ತ ಸಮಯಕ್ಕೆ ರಕ್ತ ಸಿಗದೆ ವಿವಿಧ ರೀತಿಯ ರಸ್ತೆ ಅಪಘಾತಗಳಲ್ಲಿ ಸಾವಿಗೀಡಾಗುವವರ ಸಂಖ್ಯೆ ಹೆಚ್ಚಿದೆ. ಕೋವಿಡ್-19 ಸೋಂಕು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರೆ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರ ಬಾಬು, ಡಾ.ವಿಜಯ ಶಂಕರ್, ಡಾ.ವೆಂಕಟೇಶ ನಾಯಕ, ಡಾ.ಅಹ್ಮದ್ ಹುಸೇನ್, ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಶಾವಂತಗೇರಿ ಇದ್ದರು.
ರೆಡ್ಕ್ರಾಸ್ ಸಂಸ್ಥೆಯ ದಂಡಪ್ಪ ಬಿರಾದರ ನಿರೂಪಿಸಿದರು. ಭಾರತ ಸೇವಾದಳದ ವಿದ್ಯಾಸಾಗರ ಚಿಮಣಿಗೇರಿ ವಂದಿಸಿದರು. ಶಿಬಿರದಲ್ಲಿ ಹಲವರು ರಕ್ತದಾನ ಮಾಡಿದರು.