ಸಿಂಧನೂರು: ತಾಲ್ಲೂಕಿನ ಗುಂಡಾದಿಂದ ಹೊಕ್ರಾಣಿ ಗ್ರಾಮಕ್ಕೆ ತೆರಳುತ್ತಿರುವ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಬ್ರಿಜ್ ಕಮ್ ಬ್ಯಾರೇಜ್ ಕಾಮಗಾರಿ ಸ್ಥಳಕ್ಕೆ ಗುರುವಾರ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ನೀಡಿ ಪರಿಶೀಲಿಸಿದರು.
ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿ, ‘2018-19ನೇ ಸಾಲಿನ ಕೆಕೆಆರ್ಡಿಬಿ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ₹ 3 ಕೋಟಿ ವೆಚ್ಚದಲ್ಲಿ ಬ್ರಿಜ್ ಕಮ್ ಬ್ಯಾರೇಜ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಸೇತುವೆ ನಿರ್ಮಾಣವಾದರೆ ಹಳ್ಳಿ ಜನರ ಸಂಚಾರಕ್ಕೆ ತುಂಬಾ ಅನುಕೂಲವಾಗಲಿದೆ’ ಎಂದು ತಿಳಿಸಿದರು.
‘ಬಿಜೆಪಿಯವರು ದುರುದ್ದೇಶದಿಂದ ಕಾಮಗಾರಿಗೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಕೆಲಸ ನಿಲ್ಲಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕೆಲಸದ ಬಗ್ಗೆ ಮಾಹಿತಿ ಬೇಕಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಬಳಿ ಪಡೆಯಿರಿ. ಬದಲಿಗೆ ಕೆಲಸಕ್ಕೆ ಅಡ್ಡಿಪಡಿಸಿ ತೊಂದರೆ ಕೊಡುವುದು ಸರಿಯಲ್ಲ. ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ಈ ಕೆಲಸ ನಿಂತರೆ ರೈತರು ಮತ್ತು ವಾಹನ ಸವಾರರಿಗೆ ತೊಂದರೆ ಅನುಭವಿಸಲಿದ್ದಾರೆ’ ಎಂದರು.
ನಿಗದಿತ ಅವಧಿಯಲ್ಲಿ ಗುಣಮಟ್ಟದ ಸೇತುವೆ ನಿರ್ಮಾಣ ಮಾಡಲಾಗುವುದು. ಕಳಪೆಯಾಗಿದ್ದು ಕಂಡು ಬಂದರೆ ತಾವು ಹಾಗೂ ಮೇಲಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಮುಖಂಡ ಮಲ್ಲನಗೌಡ ಸೇರಿದಂತೆ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಇದ್ದರು.