ರಾಯಚೂರು: ಅಪರಾಧ ಪ್ರಕರಣಗಳನ್ನು ತಡೆಗಟ್ಟಿ, ನಿಯಂತ್ರಣ ಮಾಡುವುದಕ್ಕೆ ಪೊಲೀಸರೊಂದಿಗೆ ಸಾರ್ವಜನಿಕರು ಸಹಕಾರ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶುಕ್ರವಾರ ಏರ್ಪಡಿಸಿದ್ದ ಅಪರಾಧ ತಡೆ ಮಾಸಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಜನಸಾಂದ್ರತೆಯಿಲ್ಲದ ಪ್ರದೇಶಗಳಲ್ಲಿ ಕಳ್ಳರ ಕಣ್ಣಿಗೆ ರಾಚುವಂತೆ ಆಭರಣಗಳನ್ನು ಧರಿಸಿಕೊಂಡು ಹೋಗುವುದರಿಂದ ಕಳ್ಳರಿಗೆ ಅವಕಾಶ ನೀಡಿದಂತಾಗುತ್ತದೆ. ಮದ್ಯಪಾನ ಸೇವಿಸಿ ವಾಹನ ಚಾಲನೆ ಮಾಡಬಾರದು. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಎಲ್ಲರೂ ಸಹಕಾರ ನೀಡಬೇಕಾಗುತ್ತದೆ ಎಂದು ಹೇಳಿದರು.
ಮಟಕಾ, ಜೂಜಾಟ, ಅಕ್ರಮ ಮದ್ಯಮಾರಾಟ, ಸೈಬರ್ ಅಪರಾಧಗಳಿಂದ ದೂರು ಇರಬೇಕು. ಕಾನೂನು ಕೈಗೆತ್ತಿಕೊಳ್ಳಬಾರದು. ಸಾಮಾಜಿಕ ಜಾಲತಾಣ ಬಳಸಿಕೊಂಡು ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಎಲ್ಲರೂ ಜಾಗೃತರಾಗಿ ಇರಬೇಕು. ಪೊಲೀಸರು ಎಲ್ಲರಿಗೂ ರಕ್ಷಣೆ ಒದಗಿಸಲು ಸಾಧ್ಯವಾಗುವುದಿಲ್ಲ. ಹಿರಿಯರು ಹೇಳುವ ಬುದ್ಧಿವಾದವನ್ನು ಕೇಳಬೇಕು. ಬುದ್ಧಿವಾದವನ್ನು ನಿರ್ಲಕ್ಷ್ಯ ಮಾಡಿದರೂ ಅಪರಾಧಗಳು ಹೆಚ್ಚಾಗುತ್ತವೆ. ಕಾನೂನು ಪರಿಪಾಲನೆಗೆ ಆದ್ಯತೆ ನೀಡಬೇಕು. ಸಹನೆ ಇಟ್ಟುಕೊಂಡರೆ ಮಾತ್ರ ಜೀವನ ಸುಗಮವಾಗಿ ನಡೆಸುವುದಕ್ಕೆ ಸಾಧ್ಯ ಎಂದರು.
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಪ್ರತಿಯೊಬ್ಬರು ಕಾಳಜಿ ವಹಿಸಬೇಕಾಗುತ್ತದೆ. ಜವಾಬ್ದಾರಿಯನ್ನು ಅರಿತು ಸಹನೆಯಿಂದ ಜೀವನ ಮಾಡಿದರೆ ಎಲ್ಲಿಯೂ ಅಪರಾಧಗಳು ನಡೆಯುವುದಿಲ್ಲ. ಕ್ಷುಲಕ ಕಾರಣಗಳು ದೊಡ್ಡದಾಗಿ ಬೆಳೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರಬಾಬು ಮಾತನಾಡಿ, ಸಮಾಜದಲ್ಲಿ ಕಾನೂನು ಅರಿವು ಮೂಡಿಸಿ ಅಪರಾಧ ತಡೆಗಟ್ಟುವ ಕೆಲಸವನ್ನು ಪೊಲೀಸ್ ಇಲಾಖೆಯಿಂದ ಮಾಡಲಾಗುತ್ತಿದೆ. ಯಾವುದೇ ಅಪರಾಧ ಮತ್ತು ಯಾರೇ ಅಪರಾಧ ಮಾಡಿದರೂ ಪೊಲೀಸರ ಕೈಗೆ ಸಿಕ್ಕಿ ಬೀಳುತ್ತಾರೆ. ಜಿಲ್ಲೆಯಲ್ಲಿ ಬಹುತೇಕ ಪ್ರಕರಣಗಳಲ್ಲಿ ಅಪರಾಧಿಗಳು ಪತ್ತೆಯಾಗಿದ್ದಾರೆ. ಕೆಲವು ಪ್ರಕರಣಗಳ ತನಿಖೆ ಪ್ರಗತಿಯಲ್ಲಿವೆ. ಯಾವುದಾದರೂ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಹೇಲಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಪಾಟೀಲ ಇದ್ದರು.