ರಾಯಚೂರು: ನಾಗರೀಕ ಸೇವಾ ಕೇಂದ್ರಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅರ್ಜಿಗಳನ್ನು ಬೇಗನೆ ವಿಲೇವಾರಿ ಮಾಡಬೇಕು ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಅನಿರುದ್ಧ್ ಶ್ರವಣ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ವಿಡಿಯೋ ಕಾನ್ಫರೇನ್ಸ್ ಹಾಲ್ನಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್ರ ಜೊತೆಗಿನ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದರು.
ಸಿಎಸ್ಸಿ ಕೇಂದ್ರದಿಂದ ದೊರೆಯುವ ಸೌಲಭ್ಯಗಳನ್ನು ಜನಸಮಾನ್ಯರಿಗೆ ತಲುಪಿಸಬೇಕು. ನಾಗರೀಕ ಸೇವಾ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಬಂದಿರುವ ಅರ್ಜಿಗಳನ್ನು ಮತ್ತು ಆಫ್ಲೈನ್ ನಲ್ಲಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಬೇಕು. ಅರ್ಹರಿಗೆ ದೊರೆಯುವ ಸೌಲಭ್ಯಗಳನ್ನು ನೀಡಬೇಕು ಎಂದರು.
ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಇದ್ದರೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬಹುದು. ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡುವುದಕ್ಕೆ ಮಹತ್ವ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಹಾಯಕ ಆಯುಕ್ತರು ಅವರ ವ್ಯಾಪ್ತಿಯಲ್ಲಿರುವ ನಾಗರೀಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿರುವ ಲೋಪದೋಷಗಳನ್ನು ಸರಿ ಪಡಿಸಬೇಕು. ನಾಗರೀಕ ಸೇವಾ ಕೇಂದ್ರದ ಅರ್ಜಿಗಳನ್ನು ಡಿಜಿಟಲೀಕರಣ ಮಾಡಬೇಕು. ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಜಿಲ್ಲೆಯ ಗ್ರಾಮ ಪಂಚಾಯತ್ ಚುನಾವಣೆ ಯಶಸ್ವಿಗೆ ಹೆಚ್ಚಿನ ಶ್ರಮ ವಹಿಸಬೇಕು ಎಂದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಮಾತನಾಡಿ, ಗ್ರಾಮ ಪಂಚಾಯತ್ ಸರ್ವಾತ್ರಿಕ ಚುನಾವಣೆಗೆ ಬಿಎಲ್ಓ, ಪಿಡಿಓ ಮತ್ತು ಆರ್ಓಗಳ ತರಬೇತಿ ಮುಗಿದಿದೆ. ದೇವದುರ್ಗ ಮತ್ತು ಲಿಂಗಸುಗೂರು ತಾಲೂಕಗಳಲ್ಲಿ ಬಿಎಲ್ಓಗಳಿಗೆ ಮತ್ತೊಮ್ಮೆ ತರಬೇತಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ಸಹಾಯಕ ಆಯುಕ್ತ ಸಂತೋಷ ಕಾಮನಗೌಡ, ರಾಯಚೂರು ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.