ರಾಯಚೂರು: ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಿ ಯುವಕರಿಗೆ ಉದ್ಯೋಗವಕಾಶ ಒದಗಿಸಬೇಕು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ( ಮಾರ್ಕ್ಸ್ ವಾದಿ) ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಆನಂತರ ಈ ಕುರಿತು ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿ, ಕೇಂದ್ರ ಸರ್ಕಾರ ಉದಾರೀಕರಣ ನೀತಿಯಿಂದಾಗಿ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಅನಿಲ, ಬೇಳೆ, ಎಣ್ಣೆ, ಪೆಟ್ರೋಲ್, ಡೀಸೆಲ್, ವಿದ್ಯುತ್, ಕೃಷಿ ಯಂತ್ರೋಪಕರಣ, ರಸ ಗೊಬ್ಬರ, ಕ್ರಿಮಿನಾಶಕ, ಔಷಧಿಗಳ ಬೆಲೆ ಹೆಚ್ಚಾಗಿದೆ. ಶೈಕ್ಷಣಿಕ ವೆಚ್ಚಗಳು ಹೆಚ್ಚಾಗಿ ಜನ ಸಾಮಾನ್ಯರಿಗೆ ಸಮಸ್ಯೆಯಾಗಿದೆ ಎಂದು ದೂರಿದರು.
ಕೇಂದ್ರದ ಎನ್ ಡಿಎ ಸರ್ಕಾರ ಅಧಿಕಾರಕ್ಕೂ ಮೊದಲು ಪ್ರತಿ ವರ್ಷ 2 ಕೊಟಿ ಉದ್ಯೋಗ ಭರವಸೆ ನೀಡಿದ್ದು ನಿರುದ್ಯೋಗ ಪ್ರಮಾಣ ಏರಿಕೆಯಾಗುತ್ತಿದ್ದರೂ ವಿದ್ಯಾವಂತರಿಗೆ ಉದ್ಯೋಗ ಸಿಗುತ್ತಿಲ್ಲ. ಪಂಪ್ಸೆಟ್ ಗಳಿಗೆ ವಿದ್ಯುತ್ ಬಳಕೆ ಮಾಡುವ ಪೂರ್ವದಲ್ಲಿಯೇ ಹಣ ಪಾವತಿಸಬೇಕು. ಬಡವರಿಗೆ ಹಾಗೂ ಕೃಷಿ ಕ್ಷೇತ್ರ, ಸಣ್ಣ ಕೈಗಾರಿಕೆಗಳಿಗೆ ನೀಡುವ ಸಹಾಯಧನ ರದ್ದಾಗಿದೆ. ರಾಜ್ಯ ಸರ್ಕಾರದ ನೀಡುವ ಅನ್ನಭಾಗ್ಯದಲ್ಲಿ 5 ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ಹಣ ನೀಡುತ್ತಿದೆ. ಕೇಂದ್ರ ಸರ್ಕಾರ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ನಿಡಿ ರಾಜ್ಯ ಸರ್ಕಾರ್ಕಕೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ವಿದ್ಯುತ್ ಖಾಸಗೀಕರಣ ಮತ್ತು ಸ್ಕಾರ್ಟ್ ಮೀಟರ್ ಅಳವಡಿಕೆ ವಿಧಾನವನ್ನು ನಿಲ್ಲಿಸಬೇಕು. ರಾಜ್ಯ ಮತ್ತು ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಜಿ ವೀರೇಶ, ಎಚ್.ಪದ್ಮ, ಡಿ.ಎಸ್.ಶರಣಬಸವ, ಕರಿಯಪ್ಪ ಅಚ್ಚೋಳ್ಳಿ , ವರಲಕ್ಷ್ಮಿ, ಜಿಲಾನಿ ಪಾಷ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.