ರಾಯಚೂರು: ರಾಜ್ಯ ಸರ್ಕಾರ ಕಮಿಷನ್ ದಂಧೆಯಲ್ಲಿ ತೊಡಗಿದ್ದು ಗುಣಮಟ್ಟದ ಕಾಮಗಾರಿ ನಡೆಸುತ್ತಿಲ್ಲ ಎಂದು ಆರೋಪಿಸಿ ಹಾಗೂ ಇಂಧನ, ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿಯ ಪದಾಧಿಕಾರಿಗಳು ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಅಡುಗೆ ಅನಿಲ (ಸಿಲಿಂಡರ್ ಗೆ)ಕ್ಕೆ ಹೂವಿನ ಹಾರ ಹಾಕಿ ಹಾಗೂ ಒಲೆ, ಈರುಳ್ಳಿ ಪ್ರದರ್ಶಿಸಿಮಂಗಳವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಶೇ 40 ರಷ್ಟು ಕಮಿಷನ್ ಪಡೆದು ಕಾಮಗಾರಿ ನಿರ್ವಹಿಸುತ್ತಿದೆ. ಮಾಜಿ ಸಚಿವ ಈಶ್ವರಪ್ಪ ಹಾಗೂ ಇತರೆ ಸಚಿವರು ಕಮಿಷನ್ ದಂಧೆಯಲ್ಲಿ ತೊಡಗಿದ್ದು ಕೂಡಲೇ ಈಶ್ವರಪ್ಪನವರನ್ನು ಬಂಧಿಸಬೇಕು. ಎಲ್ಲಾ ಇಲಾಖೆಯಲ್ಲಿ ಸಚಿವರು ಕಮಿಷನ್ ಪಡೆಯುತ್ತಿದ್ದಾರೆ. ಕಮಿಷನ್ ದಂಧೆಯಿಂದ ಗುಣಮಟ್ಟದ ಕಾಮಗಾರಿ ನಡೆಯದೆ ಅನುದಾನ ಶಾಸಕರು ಹಾಗೂ ಸಚಿವರ ಪಾಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಗುಣಮಟ್ಟದ ಕಾಮಗಾರಿ ಹಾಗೂ ಸಾರ್ವಜನಿಕ ತೆರಿಗೆ ಹಣ ಸದುಪಯೋಗವಾಗಲು ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು ಗೃಹ ಸಚಿವರನ್ನು ಹೊಣೆಗಾರರನ್ನಾಗಿ ಮಾಡಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಆಡಳಿತ ನಡೆಸುವಲ್ಲಿ ವಿಫಲವಾದ ರಾಜ್ಯ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ರಾಜ್ಯ ಮಹಿಳಾ ಕಾರ್ಯದರ್ಶಿ ಪುಷ್ಪಾಅಮರನಾಥ, ಜಿಲ್ಲಾಧ್ಯಕ್ಷೆ ನಿರ್ಮಲಾ ಬೆಣ್ಣೆ, ರಾಜ್ಯ ಕಾರ್ಯದರ್ಶಿ ಶ್ರೀದೇವಿ ನಾಯಕ, ಶಶಿಕಲಾ ಭೀಮರಾಯ, ರಜಿಯಾ ಪಟೇಲ್, ರೇಣುಕಾ, ವಿಜಯಲಕ್ಷ್ಮೀ, ದಾಕ್ಷಾಯಿಣಿ, ವಂದನಾ, ಪ್ರತಿಭಾ, ಜ್ಯೋತಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.