ಮಾನ್ವಿ: ‘ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ಹರಡದಂತೆ ತಡೆಯಲು ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಸತೀಶ ಬಿ.ಸಿ ಹೇಳಿದರು.
ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
‘ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಜನರ ಜತೆ ಸಂಪರ್ಕದಲ್ಲಿದ್ದುಕೊಂಡು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಈ ಕುರಿತು ನಿರ್ಲಕ್ಷ್ಯವಹಿಸುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಮಾನ್ವಿ ಪಟ್ಟಣದಲ್ಲಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿಗೆ ಸೇರಿದ ಸರ್ವೇ ನಂ. 467ರಲ್ಲಿನ ಉದ್ಯಾನ ಜಾಗದ ಸಮೀಕ್ಷೆಗೆ ಮಧುಸೂಧನ್ ರಡ್ಡಿ ಎಂಬ ಅಧಿಕಾರಿಯನ್ನು ನೇಮಿಸಲಾಗಿದೆ. ಅಧಿಕಾರಿಯಿಂದ ವರದಿ ಬಂದ ನಂತರ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.
ತಾಲ್ಲೂಕಿನ ಮುಷ್ಟೂರು ಗ್ರಾಮದ ಹಳ್ಳದ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿ ಮುಷ್ಟೂರು ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು.
ತಹಶೀಲ್ದಾರ್ ಸಂತೋಷ ರಾಣಿ, ತಾಲ್ಲೂಕು ಪಂಚಾಯಿತಿ ಇಒ ಸ್ಟೆಲ್ಲಾ ವರ್ಗಿಸ್, ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್, ಪುರಸಭೆ ಮುಖ್ಯಾಧಿಕಾರಿ ಜಗದೀಶ ಬಂಢಾರಿ, ಸಮಾಜ ಕಲ್ಯಾಣ ತಾಲೂಕ ಅಧಿಕಾರಿ ರಂವಿದ್ರ, ಸಹಾಯಕ ಕೃಷಿ ನಿರ್ದೇಶಕ ಹುಸೇನ್ ಸಾಹೇಬ್, ಎಪಿಎಂಸಿ ಕಾರ್ಯದರ್ಶಿ ಯರೇಗೌಡ ಇದ್ದರು.