ಸಿಂಧನೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸ್ವಾದ) ತಾಲ್ಲೂಕು ಘಟಕದ ಪದಾಧಿಕಾರಿಗಳು ಮಿನಿವಿಧಾನಸೌಧದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲ ಕುಟುಂಬಗಳಿಗೆ ಮಾಸಿಕ ₹7,500 ಆರ್ಥಿಕ ನೆರವು ಘೋಷಿಸಬೇಕು. ಈ ಎಲ್ಲ ಕುಟುಂಬಗಳ ಸದಸ್ಯರಿಗೆ ಮಾಸಿಕ ತಲಾ 10 ಕೆಜಿ ಸಮಗ್ರ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕೇಳುವ ಎಲ್ಲ ಜನತೆಗೆ ಉದ್ಯೋಗ ಖಾತ್ರಿ ಯೋಜನೆ ಅಡಿ ತಲಾ ಕುಟುಂಬಕ್ಕೆ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಠ ₹600ಕ್ಕೆ ಹೆಚ್ಚಿಸಬೇಕು. ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ ₹10 ಸಾವಿರ ಒದಗಿಸಬೇಕು. ಭಾರತದ ಸಂವಿಧಾನದ ಮೂಲಭೂತ ಅಂಶಗಳಾದ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳನ್ನು ರಕ್ಷಿಸಬೇಕು ಎಂದು ಪದಾಧಿಕಾರಿಗಳು ಒತ್ತಾಯಿಸಿದರು.
ಶಿರಸ್ತೇದಾರ್ ಅಂಬಾದಾಸ್ ಮನವಿ ಪತ್ರ ಸ್ವೀಕರಿಸಿದರು.
ಸದಸ್ಯರಾದ ಅಪ್ಪಣ್ಣ ಕಾಂಬಳೆ, ಚಂದಪ್ಪ, ಬಂಡಾರೆಪ್ಪ, ಆದೇಶ, ರಾಮಣ್ಣ, ಮಾಬುಸಾಬ, ದೇವಪ್ಪ, ಶರಣಬಸವ, ಶಂಕ್ರಪ್ಪ ಹಾಗೂ ಶಿವರಾಜ್ ಇದ್ದರು.