ಮಸ್ಕಿ: ಪಟ್ಟಣದ 600 ಅಡಿ ಎತ್ತರದ ಬೆಟ್ಟದ ಮೇಲೆ ಇರುವ ಮಲ್ಲಿಕಾರ್ಜುನನ ದರ್ಶನಕ್ಕೆ ಶ್ರಾವಣಮಾಸದ ಕೊನೆಯ ಸೋಮವಾರ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ಪೂಜೆ ಸಲ್ಲಿಸಿದರು.
ಬೆಳಿಗ್ಗೆ 3 ಗಂಟೆಯಿಂದಲೇ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿದ ಮಹಿಳೆಯರು ಸೇರಿದಂತೆ ಸಾವಿರಾರು ಭಕ್ತರು ಮಲ್ಲಿಕಾರ್ಜುನನ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು.
ಮಲ್ಲಿಕಾರ್ಜುನನ ವಿಗ್ರಹಕ್ಕೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತರು ಅಭಿಷೇಕ ಮಾಡಿಸಿ ಅರಿಕೆ ತಿರಿಸಿಕೊಂಡರು.
ದರ್ಶನ ಪಡೆಯಲು ಭಕ್ತರು ಗಂಟೆಗಟ್ಟಲೇ ಕಾಯಬೇಕಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರಿಂದ ಪೊಲೀಸರು ಸ್ಥಳದಲ್ಲಿದ್ದು ಸಾಲಿನಲ್ಲಿ ತೆರಳುವಂತೆ ಭಕ್ತರಿಗೆ ಸೂಚಿಸುತ್ತಿದ್ದ ದೃಶ್ಯಕಂಡು ಬಂತು. ಭಕ್ತರಿಗೆ ಬೆಟ್ಟದ ಮೇಲೆ ಪ್ರಸಾದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲಾಗಿದೆ.
ಸಂಜೆ 5 ಗಂಟೆಗೆ ಬೆಟ್ಟದ ಮೇಲಿಂದ ಮಲ್ಲಿಕಾರ್ಜುನನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಮೂಲಕ ಡೊಳ್ಳು ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಪಟ್ಟಣಕ್ಕೆ ಕರೆದುಕೊಂಡು ಬರಲಾಯಿತು.
ರಾತ್ರಿ 7 ಗಂಟೆಗೆ ಪಟ್ಟಣದಲ್ಲಿರುವ ಮಲ್ಲಿಕಾರ್ಜುನನ ಉಚ್ಚ್ರಾಯ ಪ್ರಮುಖ ಬೀದಿಗಳಲ್ಲಿ ಎಳೆಯುವ ಮೂಲಕ ಒಂದು ತಿಂಗಳ ಶ್ರಾವಣ ಮಾಸಕ್ಕೆ ವೈಭವದ ತೆರೆ ಎಳೆಯಲಾಯಿತು.
ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು, ಶಾಸಕ ಆರ್. ಬಸನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ತಹಶೀಲ್ದಾರ್ ಸುಧಾ ಅರಮನೆ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸರ್ಕಲ್ ಇನ್ಸ್ಪೆಕ್ಟರ್ ಬಾಲಚಂದ್ರ ಡಿ.ಲಕ್ಕಂ, ಪಿಎಸ್ಐ ಮಣಿಕಂಠ ಸೇರಿದಂತೆ ಅನೇಕರು ಬೆಟ್ಟ ಹತ್ತಿ ಮಲ್ಲಿಕಾರ್ಜುನನ ದೇವರ ದರ್ಶನ ಪಡೆದುಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.