ರಾಯಚೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಭೆ, ಸಮಾರಂಭ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರನ್ನು ಆಹ್ವಾನಿಸುವ ಸಂದರ್ಭದಲ್ಲಿ ಶಿಷ್ಠಾಚಾರ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಆಯೋಜಿಸಲಾಗಿದ್ದ ಶಿಷ್ಠಾಚಾರ ಪಾಲನೆ ಕುರಿತ ಜಿಲ್ಲಾಮಟ್ಟದ ತ್ರೈಮಾಸಿಕ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಶಿಷ್ಠಾಚಾರ ಪಾಲಿಸುವಲ್ಲಿ ಉಲ್ಲಂಘನೆಯಾಗುತ್ತಿದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಹ್ವಾನ ಪತ್ರಿಕೆ ಮುದ್ರಿಸುವ ಮುನ್ನ ಜಿಲ್ಲಾಧಿಕಾರಿಗೆ ಒಮ್ಮೆ ತೋರಿಸಿ ಅಂತಿಮ ಪಡಿಸಬೇಕು. ಸರ್ಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರದ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಪಾಲನೆ ಮಾಡಬೇಕಾದ ಶಿಷ್ಠಾಚಾರ ಕುರಿತು ಸಭೆ ನಡೆಸಿ ಅಧಿಕಾರಿಗಳಿಗೆ ಕೆಲ ನಿರ್ದೇಶನ ನೀಡುವಂತೆ ಸೂಚಿಸಿದ ಕಾರಣ ಸಭೆ ಕರೆಯಲಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ತಹಶೀಲ್ದಾರ್ ಡಾ.ಹಂಪಣ್ಣ ಸೇರಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.