ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಾಯದಲ್ಲಿ ದೇಶದ ಪ್ರಜಾತಂತ್ರ: ಸಿದ್ದರಾಮಯ್ಯ

ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಹೇಳಿಕೆ
Last Updated 30 ಏಪ್ರಿಲ್ 2019, 17:12 IST
ಅಕ್ಷರ ಗಾತ್ರ

ರಾಯಚೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಿಂದ ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಅಪಾಯದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಲೋಕಸಭೆ ಚುನಾವಣೆಯ ಮೈತ್ರಿ ಪಕ್ಷದ ಕಾಂಗ್ರೆಸ್‌ ಅಭ್ಯರ್ಥಿ ಬಿ.ವಿ. ನಾಯಕ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಪ್ರಧಾನ ಮಂತ್ರಿಯ ಮನ್ ಕೀ ಬಾತ್ ನಿಂದ ಬಡವರ ಹೊಟ್ಟೆ ತುಂಬುವುದಿಲ್ಲ. ಬಡವರಿಗೆ ಉಚಿತವಾಗಿ ಅಕ್ಕಿ ನಮ್ಮ ಸರ್ಕಾರದಲ್ಲಿ ಕೊಟ್ಟಿದ್ದೇವೆ. ಇದನ್ನು ಪ್ರಧಾನಿ ಮಾಡಿಲ್ಲ. ಬಡವರು, ದಲಿತರು ಹಾಗೂ ಅಲ್ಪಸಂಖ್ಯಾತರ ಬಗ್ಗೆ ನರೇಂದ್ರ ಮೋದಿ ಅವರಿಗೆ ಕಾಳಜಿ ಇಲ್ಲ ಎಂದರು.

ಬಿಜೆಪಿ ನಾಯಕ ಈಶ್ವರಪ್ಪ ಉದ್ದ ನಾಲಗೆ ಬಿಡುತ್ತಾರೆ. ರಾಜ್ಯದಲ್ಲಿ ಒಬ್ಬರಿಗೂ ಹಿಂದುಳಿದ ನಾಯಕರಿಗೆ ಬಿಜೆಪಿ ಟಿಕೆಟ್ ಕೊಡಿಸಲು ಸಾಧ್ಯವಾಗಿಲ್ಲ. ಹಿಂದುಳಿದವರ ಬಗ್ಗೆ ಮಾತನಾಡುವ ನೈತಿಕತೆ ಈಶ್ವರಪ್ಪಗೆ ಇಲ್ಲ. ಪ್ರಧಾನಿಯು ಸಂವಿಧಾನಾತ್ಮಕ ಸಂಸ್ಥೆ ಗಳನ್ನು ದುರ್ಬಲಗೊಳಿಸುತ್ತಿದ್ದಾರೆ. ಆರ್‌ಬಿಐ, ಇಡಿ ಇಲಾಖೆಗಳನ್ನು ದುರುಪಯೋಗ ಮಾಡಿಕೊಂಡು ವಿರೋಧ ಪಕ್ಷದವರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದರು.

ಒಂದು ಕಡೆ ಸುಳ್ಳು ಹೇಳುವ ಪ್ರಧಾನಮಂತ್ರಿ. ಇನ್ನೊಂದು ಕಡೆ ನುಡಿದಂತೆ ನಡೆಯುವ ನಾಯಕ ರಾಹುಲ್ ಗಾಂಧಿ ಇದ್ದಾರೆ. ರಾಜಸ್ತಾನ,‌ಮಧ್ಯಪ್ರದೇಶ ಹಾಗೂ ಛತ್ತಿಸಘಡ್ ರಾಜ್ಯಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತು. ರಾಹುಲ್‌ ಗಾಂಧಿ ಅವರು ಕೊಟ್ಟ ಮಾತಿನಂತೆ ರೈತರ ಸಾಲ ಮನ್ನಾ ಮಾಡಿಸಿದ್ದಾರೆ ಎಂದು ತಿಳಿಸಿದರು.

ಕೋಮುವಾದಿ ಬಿಜೆಪಿ ಸೋಲಬೇಕು. ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬಾರದು. ರಾಜ್ಯದಲ್ಲಿ 21 ಸ್ಥಾನಗಳಲ್ಲಿ ಗೆದ್ದೆ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಬಿಜೆಪಿ ಅಭ್ಯರ್ಥಿಗಳು ತಮ್ಮ ಮುಖ ತೋರಿಸಿ ಮತ ಕೇಳುತ್ತಿಲ್ಲ. ನರೇಂದ್ರ ಮೋದಿ‌‌ ಅವರ ಮುಖ ಮಾಡಿ‌ಮತ ಕೊಡಿ ಎನ್ನುತ್ತಿದ್ದಾರೆ. ರಾಜ್ಯದಲ್ಲಿದ್ದ 16 ಬಿಜೆಪಿ ಸಂಸದರು ಏನೂ ಕೆಲಸ ಮಾಡಿಲ್ಲ. ಅದಕ್ಕಾಗಿ ಮೋದಿ ಅವರ ಮುಖ ನೋಡಿ ಎಂದು ಮತದಾರರಿಗೆ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

1971 ರಲ್ಲಿ ಚೀನಾ ಮೇಲಿನ ಯುದ್ಧವನ್ನು ನೋಡಿ ಇಂದಿರಾ ಗಾಂಧಿ‌ ಅವರನ್ನು ಅಟಲ್ ಬಿಹಾರಿ ವಾಜಪೇಯಿ ಅವರು ದುರ್ಗೆ ಎಂದು ಕರೆದಿದ್ದರು. ಈ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಬರೀ ಭಾವನಾತ್ಮಕ ವಿಚಾರ ಮಾತನಾಡಿ, ಜನರ ದಾರಿ ತಪ್ಪಿಸುತ್ತಿದ್ದಾರೆ. ಮೀಸಲಾತಿ, ಪ್ರಜಾತಂತ್ರ, ಸಾಮಾಜಿಕ ನ್ಯಾಯದ ಪರವಾಗಿ ಬಿಜೆಪಿ ಇಲ್ಲ ಎಂದರು.

ಸಂಸದರಾದ ವೀರಪ್ಪ ಮೊಯ್ಲಿ, ಕೆ.ಎಚ್‌. ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಶಾಸಕರಾದ ಡಿ.ಎಸ್‌. ಹುಲಗೇರಿ, ಬಸನಗೌಡ ದದ್ದಲ, ಶರಣಬಸಪ್ಪ ದರ್ಶನಾಪುರ, ಅಮರೇಗೌಡ ಬಯ್ಯಾಪುರ, ವಿಧಾನ ಪರಿಷತ್‌ ಸದಸ್ಯರಾದ ಎನ್‌.ಎಸ್‌. ಬೋಸರಾಜು, ಬಸವರಾಜ ಪಾಟೀಲ ಇಟಗಿ, ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಬಿ.ವಿ. ನಾಯಕ, ಕೆಪಿಸಿಸಿ ಕಾರ್ಯದರ್ಶಿ ವಸಂತಕುಮಾರ್‌, ಸಂಸದೀಯ ಕಾರ್ಯದರ್ಶಿ ಐವಾನ್‌ ಡಿಸೋಜಾ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಮಣ್ಣ ಇರಬಗೇರಾ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಎಂ. ವಿರೂಪಾಕ್ಷಿ, ಮುಖಂಡರಾದ ಹಂಪನಗೌಡ ಬಾದರ್ಲಿ, ಬಸನಗೌಡ ಬಾದರ್ಲಿ, ಹಂಪಯ್ಯ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT