ರಾಯಚೂರು: ‘ಶಿಕ್ಷಕರ ವೃತ್ತಿ ಪವಿತ್ರವಾದುದು. ಶಿಕ್ಷಕರು ಶಿಸ್ತು, ಸಂಯಮ ಗುಣ ಹೊಂದಿರಬೇಕು. ಆಗ ಮಾತ್ರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುತ್ತದೆ‘ ಎಂದು ರಾಯಚೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಹೇಳಿದರು.
ನಗರದ ಅತ್ತನೂರು ಫಂಕ್ಷನ್ ಹಾಲ್ನಲ್ಲಿ ಅಂಜುಮನ್ ಎ ರಾಯಚೂರು ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಕರಿಗೆ ಒತ್ತಡ ಹೆಚ್ಚಾಗುತ್ತಿರುವ ಕಾರಣ ಮಕ್ಕಳಿಗೆ ಬೋಧನೆ ಮಾಡುವಲ್ಲಿ ಕಷ್ಟವಾಗುತ್ತಿದೆ. ಶಿಕ್ಷಕರಿಗೆ ಹೆಚ್ಚುವರಿ ಕೆಲಸ ಕಡಿಮೆ ಮಾಡಿದರೆ ವೃತ್ತಿಯ ಪಾವಿತ್ರ್ಯತೆ ಕಾಪಾಡಬಹುದು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಶಿಕ್ಷಕರಿಗೆ ತಿಳಿಯಪಡಿಸಲು ಕಾರ್ಯಾಗಾರ ಏರ್ಪಡಿಸಿ ಮನದಟ್ಟು ಮಾಡಿಕೊಡಬೇಕಿದೆ ಎಂದರು.
ಕಾಂಗ್ರೆಸ್ ಮುಖಂಡ ಎ. ವಸಂತಕುಮಾರ ಮಾತನಾಡಿ, ಶಿಕ್ಷಣದ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು. ಸದೃಢ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಹೆಚ್ಚಿದೆ ಎಂದರು.
ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಂಜುಮನ್ ರಾಯಚೂರು ಸಂಸ್ಥೆಯ ಡಾ.ರಜಾಕ್ ಉಸ್ತಾದ್, ಮುಖಂಡ ಅಬ್ದುಲ್ ಹೈ ಫೇರೋಜ್, ಬಾಬರ್ ಇದ್ದರು.