ರಾಯಚೂರು: ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹತ್ತಿಕ್ಕುವುದಕ್ಕಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರವು ದನಮಕಾರಿ ನೀತಿ ಅನುಸರಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾ ಕ್ರೀಡಾಂಗಣ ಪಕ್ಕದ ಮಹಾತ್ಮಗಾಂಧಿ ಪುತ್ಥಳಿ ಎದುರು ಬುಧವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಕಾರ್ಯಕರ್ತರು ಮೇಣದ ದೀಪ ಬೆಳಗಿಸಿ ಧರಣಿ ನಡೆಸಿದರು. ಪೊಲೀಸರ ಕ್ರಮ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಘೋಷಣೆಗಳನ್ನು ಕೂಗಿದರು.
ಜಾಮೀಯಾ ಮಿಲಿಯಾ ಇಸ್ಲಾಮಿಯಾ ಹಾಗು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಪ್ರತಿಭಟನೆಗೆ ಭದ್ರತೆ ಕಲ್ಪಿಸಬೇಕಾದ ಪೊಲೀಸರೇ ಈ ರೀತಿ ವರ್ತಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ ಮಾರಕವಾಗಿದೆ ಎಂದು ದೂರಿದರು.
ವಿದ್ಯಾರ್ಥಿಗಳಿಗೆ ಗುಂಡು ತಗುಲಿದ್ದು ಆಸ್ಪತ್ರಗೆ ದಾಖಲಾಗಿದ್ದಾರೆ. ವಿದ್ಯಾರ್ಥಿಗಳ ಜೀವನದಲ್ಲಿ ಇದು ಕರಾಳ ದಿನವಾಗಿದೆ. ದೇಶದಲ್ಲಿ ಪ್ರಶ್ನಿಸುವವರ ದನಿ ಅಡಗಿಸುವ ಕೆಲಸ ಮಾಡುತ್ತಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ, ಮುಖಂಡ ರವಿ ಬೋಸರಾಜ, ಕೆ.ಶಾಂತಪ್ಪ, ಯುವ ಕಾಂಗ್ರೆಸ್ ಮುಖಂಡ ಅರುಣಕುಮಾರ್ ದೋತರಬಂಡಿ ಹಾಗೂ ಕಾರ್ಯಕರ್ತರು ಇದ್ದರು.