ರಾಯಚೂರು: ‘ಸುಸಂಸ್ಕೃತ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನೋತ್ಸವದ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
‘ಬ್ರಹ್ಮ, ವಿಷ್ಣು, ಮಹೇಶ್ವರರಿಗಿಂತ ಮಿಗಿಲಾದ ದೇವರೆಂದರೆ ಶಿಕ್ಷಕರು. ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳದರೂ ಶಿಕ್ಷಣ ನೀಡಿದ ಗುರುಗಳನ್ನು ಗೌರವದಿಂದ ಕಾಣಬೇಕು’ ಎಂದರು.
‘ತಂದೆ, ತಾಯಿ ಮಗುವಿಗೆ ಜೀವನದ ಪಾಠಗಳನ್ನು ಕಲಿಸಿದರೆ, ಶಿಕ್ಷಕರು ಶಿಕ್ಷಣದ ಜತೆಗೆ ಸಂಸ್ಕಾರ ಬೋಧಿಸುತ್ತಾರೆ. ಮಕ್ಕಳ ವ್ಯಕ್ತಿತ್ವ ರೂಪಿಸಲು ಶ್ರಮಿಸುತ್ತಾರೆ’ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಿಗೆ ತೆರಳಿ ಶೈಕ್ಷಣಿಕ ಸೇವೆ ಸಲ್ಲಿಸುವ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರದ ಮಟ್ಟದಲ್ಲಿ ಶಿಕ್ಷಕರ ಸಮಸ್ಯೆ ಚರ್ಚಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ಗುರು ಭವನ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ‘ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರು ಮಕ್ಕಳನ್ನು ದಿಟ್ಟಿಸಿ ನೋಡುವ ಹಾಗೂ ಇಲ್ಲ ಮಕ್ಕಳಿಗೆ ಯಾವುದೇ ಬುದ್ಧಿ ಮಾತುಗಳನ್ನು ಹೇಳುವ ಹಾಗಿಲ್ಲ. ಇದರಿಂದ ಮಕ್ಕಳು ದಾರಿ ತಪ್ಪುವ ಸಾಧ್ಯತೆ ಹೆಚ್ಚುತ್ತಿದೆ’ ಎಂದರು.
ನಿವೃತ್ತ ಪ್ರಾಚಾರ್ಯ ಹಾಗೂ ಸಾಹಿತಿ ವೆಂಕಟರಾವ್ ಕುಲಕರ್ಣಿ ಉಪನ್ಯಾಸ ನೀಡಿ, ‘ಶಿಕ್ಷಕರು ತಮ್ಮ ವೃತ್ತಿಯನ್ನು ಪ್ರಾಮಾಣಿಕ, ಶ್ರದ್ಧೆ–ನಿಷ್ಠೆ ಮತ್ತು ಶಾಂತಿಯುತವಾಗಿ ಮಾಡಿದ್ದಲ್ಲಿ ಸಮೃದ್ಧ ದೇಶ ನಿರ್ಮಾಣ ಮಾಡಬಹುದಾಗಿದೆ’ ಎಂದು ಹೇಳಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್, ಜಿಲ್ಲಾ ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಇಂದಿರಾ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಹುಗ್ಗಿ, ಡಯಟ್ ಅಧಿಕಾರಿ ಮಲ್ಲಿಕಾರ್ಜುನ, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ, ಮಾನವಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.