ಸಿಂಧನೂರು: ಎಲ್ಲಾ ಮಕ್ಕಳನ್ನು ಪ್ರತಿಭಾನ್ವಿತರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದ ಆನಂದ ಪಬ್ಲಿಕ್ ಶಾಲೆಯಲ್ಲಿ ಖಾಸಗಿ ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ತಾಲ್ಲೂಕು ಘಟಕ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಳ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಮೇಳದಲ್ಲಿ ಆಡಳಿತ ಮಂಡಳಿಗಳ ಮುಖ್ಯಸ್ಥರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ಸಂವಾದ ನಡೆಯಲಿ. ಸಂದರ್ಶನದಲ್ಲಿ ಆಯ್ಕೆಯಾದ ನಂತರ ಮಕ್ಕಳ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಸಂವಿಧಾನದ 371 (ಜೆ) ಕಲಂ ತಿದ್ದುಪಡಿಯಾದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯೋಗಾವಕಾಶಗಳಿವೆ. ಸರ್ಕಾರ ಅವುಗಳನ್ನು ಭರ್ತಿ ಮಾಡಬೇಕಾದ ಕೆಲಸ ನಡೆಸಬೇಕು ಎಂದರು.
ಖಾಸಗಿ ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜಪ್ಪ ಮಾತನಾಡಿ, ಶಿಕ್ಷಕರು ಇತರರಂತೆ ಸುಳ್ಳು, ಕೆಲಸಗಳ್ಳತನದಂಥ ಸ್ವಭಾವದಿಂದ ದೂರವಿರಬೇಕು ಎಂದು ತಿಳಿಸಿದರು.
ಜಿಲ್ಲಾ ಘಟಕದ ಉಪಾಧ್ಯಕ್ಷ ಎಂ.ದೊಡ್ಡಬಸವರಾಜ ಮಾತನಾಡಿ, ಖಾಸಗಿ ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಹಮ್ಮಿಕೊಳ್ಳಬಹುದಾದ ಚಟುವಟಿಕೆಗಳ ಕುರಿತು ವಿವರಿಸಿದರು.
ಒಕ್ಕೂಟದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಮಲ್ಲನಗೌಡ ಕಾನಿಹಾಳ, ಆನಂದ ಪಬ್ಲಿಕ್ ಶಾಲೆಯ ಅಧ್ಯಕ್ಷ ಗೌತಮ್ ಮೆಹ್ತಾ ಇದ್ದರು. ವೀರೇಶ ಅಗ್ನಿ ನಿರೂಪಿಸಿದರು. ಅನಿಲಕುಮಾರ ವಂದಿಸಿದರು.