ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಬರ ಪರಿಹಾರ ವಿತರಣೆಯ ತಾರತಮ್ಯ ಖಂಡಿಸಿ ಪ್ರತಿಭಟನೆ

Published 20 ಮೇ 2024, 13:50 IST
Last Updated 20 ಮೇ 2024, 13:50 IST
ಅಕ್ಷರ ಗಾತ್ರ

ರಾಯಚೂರು: ಫಸಲ್ ಬಿಮಾ ಯೋಜನೆಯಡಿ ವಿಮೆ ಹಣ ಪಾವತಿಸಿದ ರೈತರಿಗೆ ವಿಮೆ ಹಣ ಮಂಜೂರು ಮಾಡುವುದು. ಬರ ಪರಿಹಾರದಲ್ಲಿನ ತಾರತಮ್ಯವನ್ನು ಸರಿಪಡಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಆ ನಂತರ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಮೂಲಕ ಕಂದಾಯ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

‌‘2023-24ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ರೈತರು ಜಮೀನಿನಲ್ಲಿ ಬಿತ್ತನೆ ಮಾಡಿದ ಬೆಳೆಗೆ ಫಸಲ್ ಭಿಮಾ ಯೋಜನೆಯಡಿ ಬೆಳೆ ವಿಮೆಯನ್ನು ಪಾವತಿಸಿದ್ದಾರೆ. ಆದರೆ, ಮಳೆ ಕೊರತೆ ಹಾಗೂ ತುಂಗಭದ್ರಾ ಎಡದಂಡೆ ಕಾಲುವೆಗೆ ಸರಿಯಾಗಿ ನೀರು ಬರದೇ ರೈತರಿಗೆ ಬೆಳೆ ನಷ್ಟವಾಗಿದೆ. ರೈತರ ಬೆಳೆಗೆ ಮಾಡಿದ ಖರ್ಚು ಬಂದಿಲ್ಲ. ಅಲ್ಲದೇ ರೈತರು ಬೆಳೆ ವಿಮೆ ಮಾಡಿಸಿದರೂ ವಿಮೆ ಹಣವನ್ನು ರೈತರ ಖಾತೆಗಳಿಗೆ ಜಮೆಮಾಡಿಲ್ಲ’ ಎಂದು ಆರೋಪಿಸಿದರು.

‘ಜಿಲ್ಲೆಯ ರಾಯಚೂರು ಹಾಗೂ ದೇವದುರ್ಗ ತಾಲ್ಲೂಕುಗಳಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತುಂಬಿದ ವಿಮೆ ಹಣವನ್ನು ಪ್ರಭಾವಿಗಳು ಹಾಗೂ ವಿಮೆ ಕಂಪನಿಯ ಅಧಿಕಾರಿಗಳು ಸೇರಿಕೊಂಡು ಭ್ರಷ್ಟಾಚಾರವೆಸಗಿದ್ದಾರೆ. ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಬರ ಪರಿಹಾರ ವಿತರಣೆಯಲ್ಲಿ ಕಂದಾಯ ಇಲಾಖೆಯು 3 ಎಕರೆಗೆ ₹5 ಸಾವಿರ ಹಾಗೂ ಇನ್ನೂ ಕೆಲ ರೈತರಿಗೆ 3 ಎಕರೆಗೆ ₹9 ಸಾವಿರ ಬರ ಪರಿಹಾರ ನೀಡಿ ತಾರತಮ್ಯ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ಹತ್ತಿ ಬೀಜ, ಕ್ರಿಮಿನಾಶ, ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೃಷಿ ಇಲಾಖೆ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.

‘ಕಳಪೆ ಹತ್ತಿ ಬೀಜ, ರಸಗೊಬ್ಬರ ಹಾಗೂ ಕ್ರಿಮಿನಾಶಕಗಳನ್ನು ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ರೈತರಿಗೆ ಅವಶ್ಯಕ ಇರುವ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳನ್ನು ಎಂಆರ್‌ಪಿ ದರದಲ್ಲಿ ಮಾರಾಟ ಮಾಡಲು ವ್ಯಾಪಾರಸ್ಥರಿಗೆ ಸೂಕ್ತ ಆದೇಶ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ  ಘಟಕದ ಅಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಗೌರವಾಧ್ಯಕ್ಷ ನರಸಿಂಗರಾವ್  ಕುಲಕರ್ಣಿ,  ಉಪಾಧ್ಯಕ್ಷ ನರಸಪ್ಪ ಯಾದವ್ ಹೊಕ್ರಾಣಿ, ಪದಾಧಿಕಾರಿಗಳಾದ ಹುಲಿಗೆಪ್ಪ ಜಾಲಿಬೆಂಚಿ, ವೀರೇಶಗೌಡ ಕಡಗಂದೊಡ್ಡಿ, ಅಕ್ಕಮ್ಮ ತಲಮಾರಿ, ಅಬ್ದುಲ್  ಮಾಜಿದ್ ಬಿಚ್ಚಾಲಿ, ಹಂಪಣ್ಣ ಜಾನೇಕಲ್, ರಮೇಶ ಗಾಣಧಾಳ, ಹುಲಿಗೆಪ್ಪ ಜಾಲಿಬೆಂಚಿ, ಈರಣ್ಣ ಪತಂಗಿ, ನರಸಪ್ಪ, ದೇವಪ್ಪ ಜೇಗರಕಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT