ರಾಯಚೂರು: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ನಿರ್ದಿಷ್ಟ ಗುರಿ ಇಟ್ಟುಕೊಳ್ಳುವುದು ತುಂಬಾ ಮುಖ್ಯ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹೇಳಿದರು.
ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸೆಂಟರ್ ಫಾರ್ ಎಂಪ್ಲಾಮೆಂಟ್ ಅಪಾರ್ಚುನಿಟಿಸ್ ಮತ್ತು ಲರ್ನಿಂಗ್ ಸಂಸ್ಥೆಯಿಂದ ಭಾನುವಾರ ಏರ್ಪಡಿಸಿದ್ದ ‘ವಸತಿ ನಿಲಯಗಳ ಪದವಿ ವಿದ್ಯಾರ್ಥಿಗಳಿಗೆ ವೃತ್ತ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮ ಪರೀಕ್ಷೆಗಳ ಪೂರ್ವ ತಯಾರಿ ಮಾಹಿತಿ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.
ಕಾಲಹರಣ ಮಾಡದೆ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರಿ ಹುದ್ದೆ ಪಡೆಯು ಗುರಿ ಇದ್ದರೆ, ಅದಕ್ಕೆ ಬೇಕಾಗುವ ಪೂರ್ವ ತಯಾರಿ ಆರಂಭಿಸಬೇಕು. ಐಎಎಸ್, ಐಪಿಎಸ್ ಮತ್ತು ಕೆಎಎಸ್ ಹುದ್ದೆಗಳಿಗೆ ಕಠಿಣ ಪರಿಶ್ರಮ ಅತಿ ಅವಶ್ಯಕ. ಪದವಿ ಮುಗಿದ ನಂತರ ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಗೊಂದಲ ಇರಬಾರದು ಎಂದು ಹೇಳಿದರು.
ವಿದ್ಯಾರ್ಥಿ ದೆಸೆಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ನೆರವಾಗುತ್ತವೆ. ಮನಸ್ಸು ಏಕಾಗ್ರತೆಯಿಂದ ಕೂಡಿರಬೇಕು ಎಂದು ತಿಳಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಕೌಟುಂಬಿಕ ಸಹಕಾರವೂ ಬೇಕಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಾಲ್ಯವಿವಾಹ ಸಮಸ್ಯೆ ಇರುವುದರಿಂದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗದಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರದಿಂದ ಬಾಲ್ಯವಿವಾಹ ತಡೆಗಟ್ಟುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಪುಸ್ತಕಗಳ ಜೊತೆಗೆ ಪ್ರತಿನಿತ್ಯ ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳನ್ನು ಓದುವು ಹವ್ಯಾಸ ಬೆಳಸಿಕೊಂಡಾಗ ಭಾಷೆಯ ಮೇಲೆ ಹಿಡಿತ ಸಾಧಿಸಲು ಸಹಕಾರಿಯಾಗುತ್ತದೆ. ಪತ್ರಿಕೆ ಒದುವುದಕ್ಕೆ ಪ್ರತ್ಯೇಕ ಸಮಯವನ್ನು ಮೀಸಲಿಡಬೇಕು. ಪತ್ರಿಕೆಗಳನ್ನು ಒದುವುದರಿಂದ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ಮಾಡುವ ಜೊತೆಗೆ ದೇಶದಲ್ಲಿ ನಡೆಯುತ್ತಿರುವ ಆಗು ಹೋಗುಗಳ ವಿದ್ಯಮಾನಗಳ ಬಗ್ಗೆ ಜ್ಞಾನವನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಹಲವು ಸಮಸ್ಯೆಗಳ ಎದುರಾಗುತ್ತವೆ. ಅವುಗಳನ್ನು ಮೆಟ್ಟಿನಿಲ್ಲುವ ಸಾಮರ್ಥ್ಯವನ್ನು ತಂದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಮಾತನಾಡಿ, ಮಾರ್ಗದರ್ಶನ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಲು ಸಹಕಾರಿಯಾಗಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಐಎಎಸ್ ಪ್ರೋಬೇಷನರಿ ಅಧಿಕಾರಿ ಯುಕೇಶ ಕುಮಾರ್, ಸಮಾಜ ಕಲ್ಯಾಣಾಧಿಕಾರಿ ಆರ್.ಸುಬ್ರಮಣ್ಯ, ಯುವ ಸಬಲೀಕರಣ ಅಧಿಕಾರಿ ರಾಜು ಬಾವಿಹಳ್ಳಿ, ಚಿದಾನಂದ, ರಾಜು, ಎಂ.ಎಸ್. ಗೋನಾಳ ನಂಜನಾಯಕ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.