ರಾಯಚೂರು: ನಗರದ ಜಿಲ್ಲಾ ಕ್ರೀಡಾಂಗಣದ ಹತ್ತಿರದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಬಳಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ವತಿಯಿಂದ ಸರಳವಾಗಿ ಗಾಂಧಿ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ
ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ., ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಡಾ. ದೇವೆಂದ್ರ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಹಾತ್ಮ ಗಾಂಧಿ ಅವರ ಪುತ್ಥಳಿಗೆ
ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು.
ಕೊರೊನಾ ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ಹಾಗೂ ರಾಜ್ಯ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಸರಳವಾಗಿ ಗಾಂಧಿ ಜಯಂತಿ ಆಚರಿಸಲಾಯಿತು ಎಂದು ಜಿಲ್ಲಾಧಿಕಾರಿ ಹೇಳಿದರು.
ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದರ, ಭಾರತ ಸೇವಾದಳದ ವಿದ್ಯಾಸಾಗರ ಚಿಮಣಿಗೇರಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ವಿವಿಧೆಡೆ ಸ್ಮರಣೆ
ಲಿಂಗಸುಗೂರು: ತಾಲ್ಲೂಕಿನ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಲ್ಲಿ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.
ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಚಾಮರಾಜ ಪಾಟೀಲ್, ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಬಿಇಒ ಹೊಂಬಣ್ಣ ರಾಠೋಡ ಸೇರಿದಂತೆ ವಿವಿಧ ಇಲಾಖೆಗಳ, ಶಾಲಾ ಕಾಲೇಜುಗಳ ಮುಖ್ಯಸ್ಥರ ನೇತೃತ್ವದಲ್ಲಿ ಸರಳವಾಗಿ ಜಯಂತಿ ಆಚರಿಸಲಾಯಿತು.
ಆದರೆ, ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರ ಇರಿಸಿ, ಪೂಜೆ ಸಲ್ಲಿಸದಿರುವ ಬಗ್ಗೆ ಬಹುತೇಕ ಸಂಘ ಸಂಸ್ಥೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
‘ಸನ್ಮಾರ್ಗದಲ್ಲಿ ಬದುಕಿ’
ಸಿರವಾರ: ‘ಮಹಾನ್ ನಾಯಕರ ತ್ಯಾಗ ಬಲಿದಾನ ಮತ್ತು ಅವರ ಸನ್ಮಾರ್ಗದಲ್ಲಿ ನಡೆದು ಅವರ ಸ್ಮರಣೆ ಮಾಡುವುದು ನಮ್ಮ ಕರ್ತವ್ಯ‘ ಎಂದು ಬಸವೇಶ್ವರ ಕಾಲೇಜು ಅಧ್ಯಕ್ಷ ನರಸಿಂಹರಾವ್ ಕುಲಕರ್ಣಿ ಹೇಳಿದರು.
ಪಟ್ಟಣದ ಬಸವೇಶ್ವರ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಶುಕ್ರವಾರ ನಡೆದ ಕಾರ್ಯಕ್ರದಲ್ಲಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ ಗಾಂಧೀಜಿ ಮತ್ತು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.
ಮಾಲಾರ್ಪಣೆ
ಕವಿತಾಳ: ಪಟ್ಟಣದ ವಿವಿಧೆಡೆ ಗಾಂಧಿ ಜಯಂತಿ ಆಚರಿಸಲಾಯಿತು.
ಇಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಮುಖ್ಯ ಶಿಕ್ಷಕಿ ಮಂಜುಳಾ ಅಂಗಡಿ ಮಾಲಾರ್ಪಣೆ ಮಾಡಿದರು.
ಸಿದ್ರಾಮೇಶ, ಗಿರೀಶ್ ಅಂಗಡಿ, ಶರಣಪ್ಪ, ಸಮೀನಾಭಾನು ಇದ್ದರು.
ಸಂತೆ ಬಜಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರೀ ಭಾವಚಿತ್ರಕ್ಕೆ ಡಾ.ರಾಮಕೃಷ್ಣ ಕುಲ್ಕರ್ಣಿ ಮಾಲಾರ್ಪಣೆ ಮಾಡಿದರು.
ವಿಜಯಭಾಸ್ಕರ್ ಕೋಸ್ಗಿ, ಜೈ ಭಾರತ ಸಂಘಟನೆಯ ಮುಖಂಡ ಜಹಂಗೀರ್ ಪಾಶಾ, ರಮೇಶ ಮಡಿವಾಳ, ಎಸ್.ಎಂ.ಜಾವೀದ್, ರಿಯಾಜ್ ಮುಲ್ಲಾ, ಹುಸೇನ್ ಬಾಶಾ, ಆಂಜನೇಯ, ರಾಜು ಇಲ್ಲೂರು, ಗುಂಡಪ್ಪ, ಮಹಾದೇವ ಹಡಪದ, ಗೋಪಾಲಕೃಷ್ಣ ಕುಕುಲ್ಕರ್ಣಿ, ದೇವರಾಜ ರೊಟ್ಟಿ, ಮಹ್ಮದ್ ರಫಿ, ಯಾಸೀನ್, ನಿಂಗಪ್ಪ ಇದ್ದರು.
ಬಾಲಕರ ಸರ್ಕಾರಿ ಪ್ರೌಢಶಾಲೆ ಮತ್ತು ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.