ರಾಯಚೂರು: ಹಿರಿಯ ನಾಗರಿಕರಿಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಅರ್ಹರಿಗೆ ದೊರೆಯುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ನಿವೃತ್ತ ನೌಕರರ ಸಂಘದಿಂದ ಶನಿವಾರ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಲು ಹಿರಿಯರ ಹಾಗೂ ಅನುಭವಿಗಳ ಮಾರ್ಗದರ್ಶನ ಸಹಕಾರಿಯಾಗಲಿದೆ. ಪ್ರತಿಯೊಂದು ಜಿಲ್ಲೆಯಲ್ಲಿ ಗಾಂಧಿ ಭವನ ನಿರ್ಮಾಣ ಮಾಡಲು ಸರ್ಕಾರ ತೀರ್ಮಾನಿಸಿದ್ದು, ನಗರದಲ್ಲೂ ಗಾಂಧಿ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಸಮಾಜದ ಅಭಿವೃದ್ಧಿಯಲ್ಲಿ ಹಿರಿಯ ನಾಗರಿಕರ ಪಾತ್ರ ಪ್ರಮುಖವಾಗಿದೆ. ಸಮಾಜಕ್ಕೆ ಅವರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ನಿವೃತ್ತ ನೌಕರರ ಸಂಘ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕಚೇರಿ ತೆರೆಯಲು ಸ್ಥಳ ಗುರುತಿಸಲಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳ ಅನುದಾನ ಒದಗಿಸಿಕೊಂಡು ಕಚೇರಿ ನಿರ್ಮಾಣ ಮಾಡಲಾಗುತ್ತದೆ ಎಂದರು.
ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ಸಂಘದ ಕಚೇರಿ ನಿರ್ಮಾಣಕ್ಕೆ ಸ್ಥಳ ಗುರುತು ಮಾಡಿರುವುದಿಂದ ₹5 ಲಕ್ಷ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಹಿರಿಯ ನಾಗರಿಕರ ವಾಯು ವಿಹಾರಕ್ಕೆ ಅನುಕೂಲವಾಗಲು ಮಾವಿನ ಕೆರೆಯ ಹತ್ತಿರದ ಉದ್ಯಾನವನ ಸೇರಿದಂತೆ ನಗರದಲ್ಲಿನ 10 ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರಾದ ಡಾ.ವಿ.ಜಿ.ಕುಲಕರ್ಣಿ, ಬಸವರಾಜ ಸಕ್ರಿ, ಜಿ.ಬೆಟ್ಟಪ್ಪ, ಅಲಿ ಸೈಫುದ್ದೀನ್, ರಮೇಶ ಹೀರಾ ಅವರನ್ನು ಸನ್ಮಾನಿಸಲಾಯಿತು.
ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಿ.ಎನ್.ಸಂಪತ್, ಜಿಲ್ಲಾ ಅಧ್ಯಕ್ಷ ಮಹಾದೇವಪ್ಪ ಹಂಚಿನಾಳ, ವೀರೇಶಶಾಸ್ತ್ರೀ, ಶ್ರೀನಿವಾಸ, ಎಂ.ವೀರನಗೌಡ ಇದ್ದರು.