ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಸೇತುವೆಯಿರುವ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಜನವರಿ 12ರಿಂದ 14ರವರೆಗೆ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಸಮಾಜದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹನುಮಂತ ಜಾಲಿಬೆಂಚಿ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವಜಯಮೃತ್ಯಂಜಯ ಸ್ವಾಮೀಜಿ ಸಾನಿಧ್ಯದಲ್ಲಿ 12 ರಂದು ಬೆಳಿಗ್ಗೆ 11.30ಕ್ಕೆ ನಡೆಯುವ ಯುವಜನ ಸಮಾವೇಶವನ್ನು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅಧ್ಯಕ್ಷತೆ ವಹಿಸಲಿದ್ದು, ವಸತಿ ಸಚಿವ ಎಂಟಿಬಿ ನಾಗರಾಜ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಶಾಸಕ ಕೆ.ಶಿವನಗೌಡ ನಾಯಕ ನೀರಿನ ಟ್ಯಾಂಕ್ ಉದ್ಘಾಟಿಸಲಿದ್ದಾರೆ. ಸಚಿವರಾದ ಸಿ.ಎಸ್.ಶಿವಳ್ಳಿ, ಪುಟ್ಟರಂಗಶೆಟ್ಟಿ, ಪಿ.ಟಿ.ಪರಮೇಶ್ವರನಾಯಕ, ಸಂಸದ ಬಿ.ವಿ.ನಾಯಕ, ಶಾಸಕರಾದ ಸುರೇಶ ಬೈರತಿ, ಬಸವರಾಜ ಬೈರತಿ, ಡಿ.ಎಸ್.ಹುಲಗೇರಿ, ರಾಘವೇಂದ್ರ ಹಿಟ್ನಾಳ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3ಗಂಟೆಗೆ ಟಗರುಗಳ ಕಾಳಗ ನಡೆಯಲಿದ್ದು, ರಾತ್ರಿ 9.30ರಿಂದ ಬೂಟು ಕಾಲಿನ ಸದ್ದು ನಾಟಕ ಪ್ರದರ್ಶನ ಮಾಡಲಾಗುತ್ತದೆ ಎಂದು ತಿಳಿಸಿದರು.
13 ರಂದು ಬೆಳಿಗ್ಗೆ 11.30ಕ್ಕೆ ಹೊಸದುರ್ಗ ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ, ಕೆ.ಆರ್.ನಗರ ಕನಕ ಪೀಠದ ಶಿವಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ನೌಕರರ ಸಮಾವೇಶವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ವಿಶ್ವನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಸಚಿವರಾದ ಬಂಡೆಪ್ಪ ಖಾಶೆಂಪುರ, ವೆಂಕಟರಾವ ನಾಡಗೌಡ, ಪ್ರಿಯಾಂಕ ಖರ್ಗೆ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ರಾತ್ರಿ 9.30ರಿಂದ ರಾಷ್ಟ್ರಮಾತೆ ವೀರರಾಣಿ ಅಹಿಲ್ಯಾಬಾಯಿ ಹೋಳ್ಕರ್ ನಾಟಕ ಪ್ರದರ್ಶನ ನಡೆಯಲಿದೆ ಎಂದರು.
14 ರಂದು 11.30ಕ್ಕೆ ಆಯೋಜಿಸಿರುವ ಸಿದ್ಧರಾಮೇಶ್ವರ ಜಯಂತಿಯನ್ನು ಮಹಾರಾಷ್ಟ್ರ ಸರ್ಕಾರದ ಮೀನುಗಾರಿಕೆ ಹಾಗೂ ಪಶುಸಂಗೋಪನಾ ಸಚಿವ ಮಹದೇವ ಜಾನಕಾರ ಉದ್ಘಾಟಿಸಲಿದ್ದಾರೆ. ಕೆ.ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಲುಮತ ಭಾಸ್ಕರ, ಕನಕರತ್ನ, ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮಧ್ಯಾಹ್ನ 3ಗಂಟೆ ಎತ್ತುಗಳಿಂದ ಭಾರ ಎಳೆಯುವ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.
ನಾಗರಾಜ ಮರ್ಚೆಡ್, ರಾಜಶೇಖರ ದಿನ್ನಿ, ವೇಣುಗೋಪಾಲ, ಬಸವರಾಜ, ಮಹಾದೇವಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.