ಕವಿತಾಳ: ಪಟ್ಟಣ ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ರಾತ್ರಿಯಿಡಿ ಧಾರಾಕಾರವಾಗಿ ಮಳೆ ಸುರಿದಿದೆ. ವಾತಾವರಣದಲ್ಲಿ ಸ್ವಲ್ಪ ಮಟ್ಟಿಗೆ ತಂಪಾಗಿದ್ದು, ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.
ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ನಸುಕಿನ ಜಾವ 4 ಗಂಟೆಯವರೆಗೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿಯಿತು. ಧಾರಾಕಾರ ಮಳೆಯಿಂದ ಭೂಮಿ ಹಸಿಯಾಗಿದ್ದು, ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ರೈತರು ಹೇಳುತ್ತಿದ್ದಾರೆ.
ಕಳೆದ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ಕೈ ಕೊಟ್ಟ ಪರಿಣಾಮ ತೀವ್ರ ಬರ ಪರಿಸ್ಥಿತಿ ಎದುರಾಗಿತ್ತು. ಈ ವರ್ಷ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ರೈತರಲ್ಲಿ ಆಶಾ ಭಾವನೆ ಮೂಡಿದೆ.
ಪಟ್ಟಣದಲ್ಲಿ ಅಂದಾಜು 52 ಮಿ.ಮೀ ಮಳೆಯಾಗಿದೆ. ಪಾಮನಕಲ್ಲೂರು ಗ್ರಾಮದಲ್ಲಿ 11.4 ಮಿ.ಮೀ ಮಳೆಯಾಗಿದೆ. ಹಾಲಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲೂ ಮಳೆ ಸುರಿದಿದೆ.