ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಎಚ್‍ಐವಿ ಸೋಂಕು ಇಳಿಮುಖ: ಡಾ.ಸುರೇಂದ್ರಬಾಬು

Last Updated 30 ನವೆಂಬರ್ 2020, 13:17 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಎಚ್‍ಐವಿ, ಏಡ್ಸ್ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ
ಡಾ.ಸುರೇಂದ್ರ ಬಾಬು ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ರಾಜ್ಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಪ್ರತಿವರ್ಷ ಡಿಸೆಂಬರ್‌ 1 ರಂದು ವಿಶ್ವ ಏಡ್ಸ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಶ್ವ ಏಡ್ಸ್ ದಿನಾಚರಣೆ ಗವಾಗಿ ಡಿಸೆಂಬರ್1 ರಂದು ಜಿಲ್ಲಾಧಿಕಾರಿ ಕಚೇರಿಯಿಂದ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಆನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅತಿಹೆಚ್ಚು ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಗುತ್ತದೆ ಎಂದರು.

ಇದೇ ದಿನದಂದು ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ನಡೆಸಲಾಗುತ್ತದೆ. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕಿಯರು ಮನೆ ಮನೆಗೆ ತೆರಳಿ ಕಫ ಪರೀಕ್ಷೆ ಮಾಡುವರು. ಕ್ಷಯ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

2019-20 ಸಾಲಿನಲ್ಲಿ 608 ಎಚ್‌ಐವಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 2020-21ನೇ ಸಾಲಿನ ಅಕ್ಟೋಬರ್ ಅಂತ್ಯದರೆಗೆ 225 ಪ್ರಕರಣಗಳು ವರದಿಯಾಗಿವೆ. ಕೊರೊನಾ ಹಿನ್ನಲೆಯಲ್ಲಿ ಆಸ್ಪತ್ರೆಗಳಿಗೆ ಜನರು ಬಾರದಿರುವುದರಿಂದ ಎಚ್‍ಐವಿ ಪರೀಕ್ಷಾ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ಹೇಳಿದರು.

ರಾಯಚೂರು ತಾಲೂಕಿನಲ್ಲಿ ಅತಿಹೆಚ್ಚು ಪ್ರಕರಣಗಳು ವರದಿಯಾಗಿವೆ. 14 ವರ್ಷದೊಳಗಿನ 256 ಮಕ್ಕಳಲ್ಲಿ ಎಚ್‍ಐವಿ ಪಾಸಿಟಿವ್ ಅಂಶಗಳು ಕಂಡುಬಂದಿವೆ. ಸರ್ಕಾರದ ನಿಯಾವಳಿಗಳಂತೆ ಅವರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಮಕ್ಕಳ ಬ್ಯಾಂಕ್ ಖಾತೆಗೆ ಒಂದು ಸಾವಿರ ನೀಡಲಾಗುತ್ತಿದೆ. ಎಲ್ಲಾ ಮಕ್ಕಳಿಗೂ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT