ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಸ್ನಾತಕೋತ್ತರ ಕೇಂದ್ರಕ್ಕೆ ಗುರುವಾರ ಶಾಸಕ ಹಂಪನಗೌಡ ಬಾದರ್ಲಿ ಭೇಟಿ ನೀಡಿ ಸ್ನಾತಕೋತ್ತರ ಕೇಂದ್ರದ ಪ್ರವೇಶಗಳು, ಫಲಿತಾಂಶ ಮತ್ತು ಕುಂದು ಕೊರತೆಗಳ ಬಗ್ಗೆ ವಿಶೇಷಾಧಿಕಾರಿಯೊಂದಿಗೆ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಈ ಭಾಗದ ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಈ ಸ್ನಾತಕೋತ್ತರ ಕೇಂದ್ರ ಆರಂಭಿಸಲಾಗಿದ್ದು, ನಿರೀಕ್ಷೆಗೆ ತಕ್ಕಂತೆ ವಿದ್ಯಾರ್ಥಿನಿಯರು ದಾಖಲಾಗಿ ಉನ್ನತ ಶಿಕ್ಷಣ ಪಡೆಯುತ್ತಿರುವುದು ಹರ್ಷ ತಂದಿದೆ. ಹೆಣ್ಣು ಶಿಕ್ಷಣ ಪಡೆದರೆ ಸಮಾಜದ ಪ್ರಗತಿ ಸಾಧ್ಯವಿದೆ’ ಎಂದರು.
‘ಈ ಸ್ನಾತಕೋತ್ತರ ಕೇಂದ್ರದ ಆಡಿಟೋರಿಯಂ ಹಾಲ್, ವಿದ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡ, ರಸ್ತೆ ಹಾಗೂ ಕಾಂಪೌಂಡ್ ನಿರ್ಮಾಣಕ್ಕಾಗಿ ಅಗತ್ಯ ಯೋಜನೆ ಸಿದ್ಧಪಡಿಸಬೇಕು. ತಮ್ಮ ಹಿಂದಿನ ಅವಧಿಯಲ್ಲಿ ₹15 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿತ್ತು. ಅದನ್ನು ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವ ಸಲ್ಲಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಿಸಿದ ಸಚಿವರ ಗಮನ ಸೆಳೆದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹಣ ಮಂಜೂರುಗೊಳಿಸಿ ಎಲ್ಲ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ನಂತರ ದೂರವಾಣಿ ಕರೆಯ ಮೂಲಕ ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಉಪಕುಲಪತಿ ತುಳಸಿಮಾಲಾ ಅವರೊಂದಿಗೆ ಮಾತನಾಡಿ ಸಿಂಧನೂರು ಮಹಿಳಾ ಸ್ನಾತಕೋತ್ತರ ಕೇಂದ್ರಕ್ಕೆ ವಿವಿಧ ಕೋರ್ಸ್ಗಳನ್ನು ನೀಡಬೇಕು. ತಾವು ಕೇಂದ್ರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದರು.
ಅಕ್ಕಮಹಾದೇವಿ ಮಹಿಳಾ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ನಾಗರಾಜ, ಸಿಂಡಿಕೇಟ್ ಮಾಜಿ ಸದಸ್ಯ ಆರ್.ಸಿ.ಪಾಟೀಲ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಸ್.ಪಾಟೀಲ್, ಸರ್ಕಾರಿ ಬಾಲಕಿಯರ ಪದವಿ ಕಾಲೇಜು ಪಾಚಾರ್ಯ ನೂರ್ಬಾಷಾ, ಎಂಜಿನಿಯರ್ ವೀರಭದ್ರಗೌಡ ಹಾಗೂ ಉಪನ್ಯಾಸಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.