ರಾಯಚೂರು: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತವು ಸರ್ಕಾರದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ವಸತಿ ಯೋಜನೆಗಳಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಬೇಕಿದೆ. ವಸತಿ ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಫಲಾನುಭವಿಗಳ ಮನೆಯ ಸ್ಥಳ ಪರಿಶೀಲನೆಯನ್ನು ಕೂಡಲೇ ಪರಿಶೀಲಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲೆಯ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.
ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಯೋಜನೆಯ ವಿಷಯ ನಿರ್ವಾಹಕರು ಹಾಗೂ ಕರ ವಸೂಲಿಗಾರರು, ಫಲಾನುಭವಿಯ ಮನೆ ಪರಿಶೀಲನೆಯನ್ನು ಖುದ್ದಾಗಿ ನಡೆಸಬೇಕು. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ವಿವಿಧ ವಸತಿ ಯೋಜನೆ ಅಡಿ ಆಯ್ಕೆಯಾಗಿರುವ ಫಲಾನುಭವಿಗಳ ವಸತಿ ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಫಲಾನುಭವಿಗಳ ದಾಖಲೀಕರಣ ಹಾಗೂ ಸ್ಥಳ ಪರಿಶೀಲನೆಯನ್ನು ತಕ್ಷಣದಿಂದಲೇ ನಿರ್ವಹಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಲ್ಲದಿದ್ದಲ್ಲಿ ಸಂಬಂಧಿಸಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಈ ಕಾರ್ಯಕ್ಕೆ ವಸತಿ, ಭೂಮಿ, ನಾಡಕಚೇರಿ, ಸ್ವಚ್ಛ ಭಾರತ್ ಮಿಷನ್, ನರೇಗಾ ಸಲಹೆಗಾರರ ನೆರವು ಪಡೆಯಿರಿ, ಮೊಬೈಲ್ ಆ್ಯಪ್ ಮೂಲಕ ದಾಖಲೀಸುವ ಕಾರ್ಯವನ್ನು ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಪಿಡಿಒಗಳು ಜಂಟಿಯಾಗಿ ನಿರ್ವಹಿಸಬೇಕು. ವಿಳಂಬವಾದರೇ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು.
ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಇನ್ನೂ ಸಮಯಾವಕಾಶ ಇದೆ ಮತ್ತು ಪಟ್ಟಿಯನ್ನು ಪರಿಷ್ಕರಣೆ ಮಾಡಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ರಾಯಚೂರು ತಾಲ್ಲೂಕು ತಹಶೀಲ್ದಾರ್ ಹಂಪಣ್ಣ, ಸಿರವಾರ ತಾಲ್ಲೂಕು ತಹಶೀಲ್ದಾರ್ ಶೃತಿ ಇದ್ದರು.