ಮಸ್ಕಿ: ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ತಾಲ್ಲೂಕಿನಲ್ಲಿ ನಡೆದಿರುವ ಕಾಮಗಾರಿಗಳು ಕಳಪೆಯಾಗಿದ್ದು ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ (ಕೆಆರ್ ಎಸ್) ಗುರುವಾರ ಪಟ್ಟಣದಲ್ಲಿ ಧರಣಿ ನಡೆಸಿತು.
ಪಟ್ಟಣದ ಹಳೆಯ ಬಸ್ ನಿಲ್ದಾಣದ ಡಾ. ಅಂಬೇಡ್ಕರ್ ಪ್ರತಿಮೆ ಮುಂದೆ ಧರಣಿ ನಡೆಸಿದ ಸಂಘಟನೆಯ ಕಾರ್ಯಕರ್ತರು ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಘೋಷಣೆ ಹಾಕಿದರು.
ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ, ಭೂ ಸಮಸ್ಯೆ ಇತ್ಯಾರ್ಥ, ಸರ್ಕಾರಿ ಜಮೀಜು ಸಾಗುವಳಿ ಮಾಡುವ ರೈತರಿಗೆ ಹಕ್ಕು ಪತ್ರ ವಿತರಣೆ, ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿಯ ಜನರಿಗೆ ರುದ್ರಭೂಮಿಗೆ ಸ್ಥಳ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.
ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ದಿನ್ನಿ, ಕಾರ್ಯದರ್ಶಿ ಮಾರುತಿ ಜಿನ್ನಾಪೂರ, ಹುಲಗಪ್ಪ ಚಿಲ್ಕರಾಗಿ, ರಮೇಶ ಉದ್ಬಾಳ, ಉಮೇಶ ಹವಲ್ದಾರ್, ಛತ್ರಗೌಡ ರತ್ನಾಪೂರ, ಯಮನೂರಪ್ಪ, ಮೌನೇಶ ತುಗ್ಗಲದಿನ್ನಿ, ಹುಚ್ಚರೆಡ್ಡಿ ಸೇರಿದಂತೆ ಇತರರು ಇದ್ದರು.