ರಾಯಚೂರು: ಕಲ್ಯಾಣ ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ ಉನ್ನತ ಶಿಕ್ಷಣದಲ್ಲಿ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡುವ ಅಗತ್ಯವಿದೆ ಎಂದು ಇಗತ್ಪುರ ಭಾರತೀಯ ಪಶುವೈದ್ಯಕೀಯ ಸಂಶೋಧನೆ ಸಂಸ್ಥೆಯ ವಿಶ್ರಾಂತ ಉಪಕುಲಪತಿ ಡಾ. ಎಂ. ಸಿ. ಶರ್ಮಾ ಹೇಳಿದರು.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆಯ ಅಡಿ ಶುಕ್ರವಾರ ಏರ್ಪಡಿಸಿದ್ದ ‘ಗ್ರಂಥಾಲಯ ಡಿಜಿಟಲೀಕರಣ’ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ರಾಯಚೂರು ಕೃಷಿ ವಿವಿ ಡೀನ್ ಡಾ. ಡಿ. ಎಂ. ಚಂದರಗಿ ಮಾತನಾಡಿ, ಈ ಯೋಜನೆಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಪಡಿಸುವ ಸಲುವಾಗಿ ಬಹಳ ಅಚ್ಚುಕಟ್ಟಾಗಿ ಕಾರ್ಯರೂಪಕ್ಕೆ ತಂದಿರುವುದು ಶ್ಲಾಘನೀಯ ಎಂದರು.
ವಿಷಯ ತಜ್ಞ ಡಾ. ವಿರಾಂಜನೇಯಲು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನರ್ಜನೆ ಮಾಡುವುದಕ್ಕೆ ಇದರಿಂದ ಬಹಳ ಉಪಯೋಗವಾಗುತ್ತದೆ ಎಂದು ಹೇಳಿದರು.
ಶಿಕ್ಷಣ ನಿರ್ದೇಶಕ ಡಾ. ಎಸ್. ಕೆ. ಮೇಟಿ ಅವರು ಡಿಜಿಟಲ್ ಕಮ್ಯೂನಿಕೇಷನ್ ಮಹತ್ವದ ಬಗ್ಗೆ ತಿಳಿಸಿದರು.
ಕೃಷಿ ವಿಶ್ವವಿದ್ಯಾಲಯದ ಗ್ರಂಥಪಾಲಕ ಡಾ. ಅಶೋಕ ಹಳೆಪ್ಯಾಟಿ ವಂದಿಸಿದರು. ಆಡಳಿತಾಧಿಕಾರಿ ಡಾ. ಪ್ರಮೋದ ಕಟ್ಟಿ ನಿರೂಪಿಸಿದರು.