ರಾಯಚೂರು: ನಗರದಲ್ಲಿರುವ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ನಡೆಸಿ ಗುರುತಿನ ಚೀಟಿ ವಿತರಿಸದಿರುವ ಅಧಿಕಾರಿಗಳ ನಡೆಗೆ ಬೇಸತ್ತು ಭಂಗಿ ಸಮುದಾಯದ ಗೀತಾಸಿಂಗ್ ಅವರು ಜಿಲ್ಲಾಧಿಕಾರಿ ಕಚೇರಿ ಎದುರು ಮಲ ಸುರಿದುಕೊಳ್ಳಲು ಮುಂದಾದಾಗ, ಪೊಲೀಸರು ಮಧ್ಯ ಪ್ರವೇಶಿಸಿ ತಡೆದ ಘಟನೆ ಗುರುವಾರ ನಡೆಯಿತು.
ಮನವಿ ಸಲ್ಲಿಸಿ, ಪ್ರತಿಭಟನೆ ನಡೆಸಿದಾಗೊಮ್ಮೆ ಅಧಿಕಾರಿಗಳು ಭರವಸೆ ನೀಡುತ್ತಿದ್ದಾರೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೈಗೊಂಡ ತೀರ್ಮಾನಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ಗೀತಾಸಿಂಗ್ಅಸಮಾಧಾನ ಹೊರಹಾಕಿದರು.
ಜಿಲ್ಲಾಧಿಕಾರಿ ಕಚೇರಿಯ ಮುಖ್ಯದ್ವಾರದ ಎದುರು ಸಮುದಾಯದ ಜನರು ಸಂಜೆವರೆಗೂ ಅಧಿಕಾರಿಗಳ ಬರುವಿಕೆಗಾಗಿ ಕಾದು ಕುಳಿತಿದ್ದರು. ಆದರೆ ಅಳಲು ಆಲಿಸುವುದಕ್ಕೆ ಯಾವ ಅಧಿಕಾರಿಯೂ ಬರಲೇ ಇಲ್ಲ.