ಮಾನ್ವಿ: ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಮಾನ್ವಿ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ಬೆಳಿಗ್ಗೆಯಿಂದಲೇ ಪಟ್ಟಣದ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಕೇಂದ್ರಗಳು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಕಾರ್ಮಿಕರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಎಐಟಿಯುಸಿ, ಸಿಐಟಿಯು ಹಾಗೂ ಎಐಯುಟಿಯುಸಿ ಸಂಘಟನೆಗಳ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಮೂರು ತಾಸು ಧರಣಿ ಸತ್ಯಾಗ್ರಹ ನಡೆಸಿದರು.
ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಶಂಶಾಲಂ ಅವರ ಮೂಲಕ ಪ್ರಧಾನಮಂತ್ರಿಗೆ ಸಲ್ಲಿಸಲಾಯಿತು.
ಮುಖಂಡರಾದ ಎಚ್.ಶರ್ಪುದ್ದೀನ್ ಪೋತ್ನಾಳ, ಸಂಗಯ್ಯ ಸ್ವಾಮಿ ಚಿಂಚರಕಿ, ಚನ್ನಬಸವ ಜಾನೇಕಲ್, ಡಿ.ವೀರನಗೌಡ, ಎಂ.ಬಿ.ಸಿದ್ರಾಮಯ್ಯ ಸ್ವಾಮಿ, ಸಿದ್ದಲಿಂಗಯ್ಯ, ಬಿ.ನಿತ್ಯಾನಂದ, ರುದ್ರಪ್ಪ ನಾಯಕ, ಲಲಿತಾ, ದ್ರಾಕ್ಷಾಯಿಣಿ, ಸುಜಾತ, ನರಸುಬಾಯಿ ಹಾಗೂ ಇತರರು ಇದ್ದರು.