ಮಸ್ಕಿ(ರಾಯಚೂರು): ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ಸಾರ್ವಜನಿಕರಲ್ಲಿ ವಿಶ್ವಾಸ ವೃದ್ಧಿಸಲು ಪಟ್ಟಣದಲ್ಲಿ ಕೇಂದ್ರಿಯ ಮೀಸಲು ಪೊಲೀಸ್ ಪಡೆ(ಸಿ.ಆರ್.ಪಿ.ಎಫ್), ಪೊಲೀಸ್ ಹಾಗೂ ಇತರೆ ಭದ್ರತಾ ಪಡೆಗಳ ಪಥಸಂಚಲನ ನಡೆಯಿತು.
ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ್ ನೇತೃತ್ವದಲ್ಲಿ ಮಸ್ಕಿ ಪೊಲೀಸ್ ಠಾಣೆ ಆವರಣದಿಂದ ಪಥಸಂಚಲನವು ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
ಉಪಚುನಾವಣೆಗೆ ಮತದಾನ ಏಪ್ರಿಲ್ 17ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಜಿಲ್ಲೆಯ ಮಸ್ಕಿ ಉಪಚುನಾವಣೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದರು.
ಸಿ.ಆರ್.ಪಿ.ಎಫ್ ಪಡೆ, ಪೊಲೀಸರು, ಗೃಹರಕ್ಷಕ ದಳ ಸೇರಿದಂತೆ ವಿವಿಧ ಪಡೆಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಚುನಾವಣಾಧಿಕಾರಿ ರಾಜಶೇಖರ ಡಂಬಳ, ಸಿಂಧನೂರು ತಹಶಿಲ್ದಾರ್ ಕವಿತಾ ಇತರರು ಇದ್ದರು.