ರಾಯಚೂರು: ಕೊರೊನಾ ಸೋಂಕು ತಡೆಗಾಗಿ ನಗರದಲ್ಲಿ ಗುರುವಾರ ಮಾಸ್ಕ್ ದಿನ ಆಚರಿಸಲಾಯಿತು.
ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಂಕು ತಡೆ ಜನಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಮಾತನಾಡಿ, ಕೊರೊನಾ ಮಹಾಮಾರಿ ಸೋಂಕು ತಡೆಗಾಗಿ ಸರ್ಕಾರದಿಂದ ಮಾಡಬೇಕಾದ ಪ್ರಯತ್ನಗಳೆಲ್ಲ ಮಾಡಲಾಗಿದೆ. ಇನ್ನು ಮುಂದೆ ಜನರು ವೈಯಕ್ತಿಕ ನಿಯಮಗಳನ್ನು ಪಾಲಿಸುವುದು ಅನಿವಾರ್ಯ. ಅಂತರ ಪಾಲನೆ, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಜರ್ ಬಳಸುವುದನ್ನು ಮುಂದುವರಿಸಿದರೆ ಸೋಂಕನ್ನು ಸಂಪೂರ್ಣ ಇಲ್ಲವಾಗಿಸಲು ಸಾಧ್ಯ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ನಗರಸಭೆ, ಸೂಪರ್ ಮಾರ್ಕೆಟ್, ಶೆಟ್ಟಿಬಾಡಿ ಚೌಕ್, ಪಟೇಲ್ ವೃತ್ತ, ಚಂದ್ರಮೌಳೇಶ್ವರ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿವರೆಗೂ ಜಾಗೃತಿ ಜಾಥಾ ನಡೆಸಲಾಯಿತು.
ಜಿಲ್ಲಾಧಿಕಾರಿ, ಎಸ್ಪಿ, ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ತಹಶೀಲ್ದಾರ್ ಡಾ.ಹಂಪಣ್ಣ ಅವರು ಫಲಕಗಳನ್ನು ಹಿಡಿದುಕೊಂಡು ಮತ್ತು ಬ್ಯಾನರ್ನೊಂದಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದು ಸಾರ್ವಜನಿಕರ ಗಮನ ಸೆಳೆಯಿತು.
ವಿವಿಧ ಸಂಘ ಸಂಸ್ಥೆಗಳು, ಪೊಲೀಸರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.