ಮಸ್ಕಿ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಹಿಂದುಳಿದ ಮತ್ತು ಕಾಯಕ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ‘ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.
ಮಸ್ಕಿ ಕ್ಷೇತ್ರದ ಉಪಚುನಾವಣೆ ನಿಮಿತ್ತ ವಿವಿಧ ಹಿಂದುಳಿದ ವರ್ಗಗಳ ಸಮುದಾಯಗಳ ಸಭೆಯಲ್ಲಿ ಅವರು ಮಾತನಾಡಿದರು.
‘ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳ ಸಮಸ್ಯೆ ಆಳ ಅರಿಯಲೆಂದೇ ಇಡೀ ಕ್ಷೇತ್ರ ಸಂಚರಿಸುತ್ತಿದ್ದೇನೆ. ಪ್ರತಿ ಸಮುದಾಯದ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರತಾಪಗೌಡ ಪಾಟೀಲ ಬದ್ಧರಾಗಿದ್ದಾರೆ. ಚುನಾವಣೆಯಲ್ಲಿ ಹಿಂದುಳಿದ ವರ್ಗದ ಜನರು ಅವರ ಪರವಾಗಿ ನಿಲ್ಲಬೇಕು‘ ಎಂದು ಮನವಿ ಮಾಡಿದರು.
ಮಡಿವಾಳ, ಗೊಲ್ಲ, ಸವಿತಾ, ಗಂಗಾಮತಸ್ತ, ಉಪ್ಪಾರ, ವಿಶ್ವಕರ್ಮ, ಈಡಿಗ, ಭೋವಿ, ಬಂಜಾರ ಸೇರಿದಂತೆ ವಿವಿಧ ಸಮುದಾಯಗಳ ಜನರು ಭಾಗವಹಿಸಿದ್ದರು.
ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷ ಎಂ.ಅಪ್ಪಣ್ಣ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ, ಕೆಎಸ್ಆರ್ಟಿಸಿ ಉಪಾಧ್ಯಕ್ಷ ಈಶ್ವರಪ್ಪ ಸೇರಿದಂತೆ ಪ್ರಮುಖರು ಇದ್ದರು.