ಮಸ್ಕಿ: ‘ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳು ಒಂದೇ ನಾಣ್ಯದ ಮುಖಗಳು ಇದ್ದಂತೆ‘ ಎಂದು ಕೆಆರ್ಎಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಹೇಳಿದರು.
ಬುಧವಾರ ಮಸ್ಕಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ನಡೆದ ಪಕ್ಷದ ಅಭ್ಯರ್ಥಿ ಪರ ಚುನಾವಣೆ ಪ್ರಚಾರ ಸಭೆಗಳಲ್ಲಿ ಮಾತನಾಡಿ, ‘ಎಲ್ಲಾ ರಾಜಕೀಯ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳಗಿವೆ. ಅಧಿಕಾರ ದುರ್ಬಳಕೆ ನಡೆಸಿವೆ. ಜನರ ಕಷ್ಟಗಳಿಗೆ ಪಕ್ಷಗಳು ಸ್ಪಂದಿಸುತ್ತಿಲ್ಲ’ ಎಂದು ಟೀಕಿಸಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ.ಟಿ. ಓಬಳೇಶಪ್ಪ ನಾಯಕ ಅವರಿಗೆ ಉಪ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಿದರೆ ಕ್ಷೇತ್ರದಲ್ಲಿ ಭ್ರಷ್ಟಚಾರ ಇಲ್ಲದ ಅಧಿಕಾರ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದರು.
ಮತದಾರರು ತಮ್ಮ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಮತ್ತು ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡದ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಲಿಂಗೇಗೌಡ ಮಾತನಾಡಿ, ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಓಬಳೇಶಪ್ಪ ನಾಯಕ ಅವರಿಗೆ ಮತ ನೀಡಿ ಆಯ್ಕೆ ಮಾಡಿದರೆ ಉತ್ತಮ ಆಡಳಿತ ನೀಡುವುದಾಗಿ ಭರವಸೆ ನೀಡಿದರು.
ಪಕ್ಷದ ಅಭ್ಯರ್ಥಿ ಓಬಳೇಶಪ್ಪ ನಾಯಕ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಇದ್ದರು.
ಟಾಟಾ ಏಸ್ ವಾಹನದಲ್ಲಿ ಹಳದಿ ಬಣ್ಣದ ಟೀ ಶರ್ಟ್ ಹಾಕಿಕೊಂಡು ಹಳ್ಳಿ ಹಳ್ಳಿ ಸುತ್ತಿ ಪ್ರಚಾರ ಮಾಡುವ ಮೂಲಕ ಕ್ಷೇತ್ರದ ಗಮನ ಸೆಳೆಯುವಲ್ಲಿ ಕೆಆರ್ಎಸ್ ಪಕ್ಷ ಮುಂದಾಗಿದೆ.