ಮಸ್ಕಿ (ರಾಯಚೂರು ಜಿಲ್ಲೆ): ‘ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹಣ ಹಂಚುತ್ತಿದ್ದು, ಚುನಾವಣಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕನಕವೃತ್ತದಿಂದ ಚುನಾವಣಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ. ರಾಜ್ಯ ಸರ್ಕಾರ, ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ವಿರುದ್ಧ ಘೋಷಣೆ ಕೂಗಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕರಾದ ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಮುಖಂಡರಾದ ಎಚ್.ಆಂಜನೇಯ, ಎಚ್.ಎಂ. ರೇವಣ್ಣ, ಅಮರೇಗೌಡ ಬಯ್ಯಾಪುರ ಅವರು, ‘ಪ್ರಕರಣ ದಾಖಲಿಸಿಕೊಳ್ಳದ ತುರ್ವಿಹಾಳ ಮತ್ತು ಬಳಗಾನೂರ ಠಾಣೆಗಳ ಪಿಎಸ್ಐಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ನಾಯಕ್, ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜು, ಮುಖಂಡರಾದ ಹಂಪನಗೌಡ ಬಾದರ್ಲಿ, ಶಿವರಾಜ ತಂಗಡಗಿ ಇದ್ದರು.
ಅಭ್ಯರ್ಥಿ ಅನರ್ಹಗೊಳಿಸಿ, ಡಿಸಿ–ಎಸ್ಪಿ ವರ್ಗಾಯಿಸಿ:
‘ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮುಖಂಡರೇ ಮುಂದೆ ನಿಂತು ಮತದಾರರಿಗೆ ಹಣ ಹಂಚುತ್ತಿದ್ದಾರೆ.ಅದರ ವಿಡಿಯೊ ವೈರಲ್ ಆಗಿದ್ದು,ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಿಲ್ಲ. ಚುನಾವಣಾ ಆಯೋಗವು ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ, ಬಂಧಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.
ಕಲಬುರ್ಗಿ ಮತ್ತು ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ‘ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿ ಹಣ ಹಂಚುತ್ತಿದ್ದರೂ ಅಲ್ಲಿಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮಕೈಗೊಂಡಿಲ್ಲ. ಚುನಾವಣಾ ಆಯೋಗ ತಕ್ಷಣ ಅವರನ್ನು ವರ್ಗಾವಣೆ ಮಾಡಬೇಕು’ ಎಂದು ಒತ್ತಾಯಿಸಿದರು.
ಬಿಜೆಪಿ ಅಭ್ಯರ್ಥಿಯ ಅನರ್ಹತೆಗೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿಯೂ ತಿಳಿಸಿದರು.