ರಾಯಚೂರು: ‘ಓಪೆಕ್ ಆಸ್ಪತ್ರೆ ಇಂಥ ದುಸ್ಥಿತಿಯಲ್ಲಿ ಇದೇ ಎಂದು ಭಾವಿಸಿರಲಿಲ್ಲ. ಎಲ್ಲಾ ಲೋಪಗಳನ್ನು ಸರಿಪಡಿಸಿ ಅತ್ಯುತ್ತಮ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು ವೈದ್ಯರು ಮತ್ತು ಆಡಳಿತ ವರ್ಗ ತಾಕೀತು ಮಾಡಿದರು.
ನಗರದ ಓಪೆಕ್ ಮತ್ತು ರಿಮ್ಸ್ ಆಸ್ಪತ್ರೆಗಳಿಗೆ ಶನಿವಾರ ಭೇಟಿ ನೀಡಿದ ಬಳಿಕ ರಿಮ್ಸ್ ಸಭಾಂಗಣದಲ್ಲಿ ಸಭೆ ನಡೆಸಿದರು.
ವೈದ್ಯಕೀಯ ಉಪಕರಣಗಳ ಖರೀದಿಗೆ ಮೊದಲು ನಿರ್ದಿಷ್ಟ ಮಾರ್ಗಸೂಚಿಗಳ ಜತೆಗೆ ನಿರ್ದೇಶಕರ ಹಂತದಲ್ಲಿ ತಜ್ಞರ ಸಮಿತಿ ರಚಿಸಬೇಕು. ಯಾವುದೇ ಕಾರಣಕ್ಕೂ ಕಳಪೆ ಉಪಕರಣಗಳ ಖರೀದಿಗೆ ಅವಕಾಶವಿಲ್ಲದಂತೆ ಶ್ರೇಷ್ಠ ಗುಣಮಟ್ಟದ ಕಂಪನಿಗಳಿಗೆ ಮಾತ್ರ ಅವಕಾಶ ಇರುವಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಖಾಲಿ ಇರುವ 49 ಬೋಧಕ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಬೇಕು. ಒಂದು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಿ. ಗ್ರೂಪ್ ಬಿ ಯ 4 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ಎಂದು ಸೂಚನೆ ನೀಡಿದರು.
ಆಯುಷ್ಮಾನ್ ಭಾರತ ಯೋಜನೆಯಡಿ ವಾರ್ಷಿಕವಾಗಿ ಪಡೆಯುತ್ತಿರುವ ಅನುದಾನ ಹೆಚ್ಚಾಗುವಂತೆ ವಿಭಾಗಗಳ ಮುಖ್ಯಸ್ಥರು ಕಾರ್ಯ ಮಾಡಬೇಕು. ಆಯಾದಿನದ ಚಿಕಿತ್ಸೆ ವಿವರಗಳನ್ನು ದಾಖಲು ಮಾಡಿ ಕಳುಹಿಸಬೇಕು. ಇದನ್ನು ಪ್ರತಿ ತಿಂಗಳು ಪರಿಶೀಲಿಸಿ ಗುರಿ ತಲುಪದ ವಿಭಾಗಗಳ ಮುಖ್ಯಸ್ಥರನ್ನು ಹೊಣೆ ಮಾಡಲಾಗುವುದು ಎಂದರು.
ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು.
ಶಾಸಕ ಡಾ. ಶಿವರಾಜ ಪಾಟೀಲ, ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ರಿಮ್ಸ್ನ ಆಡಳಿತ ಮಂಡಳಿಯ ಸದಸ್ಯರು, ಒಪೆಕ್ ವಿಶೇಷಾಧಿಕಾರಿ ಸೇರಿದಂತೆ ಇದ್ದರು.