ಮಸ್ಕಿ: ‘ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್, ಮತದಾರರಿಗೆ ಆಸೆ–ಆಮಿಷ ತೋರಿಸುವ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಕೆಆರ್ಎಸ್ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಆರೋಪಿಸಿದರು.
ಪಟ್ಟಣದಲ್ಲಿ ಶುಕ್ರವಾರ ಕೊಪ್ಪಳ ಕೆಆರ್ಎಸ್ ಪಕ್ಷದ ಅಭ್ಯರ್ಥಿ ನಿರುಪಾದಿ ಗೋಮರ್ಸಿ ಪರ ಪ್ರಚಾರ ನಡೆಸಿ ಮಾತನಾಡಿದ ಅವರು,‘60 ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್ ಕುಟುಂಬ ರಾಜಕಾರಣ ಮಾಡುತ್ತಾ ಬಂದಿದೆ. ಹಣ ಇದ್ದರೆ ಮಾತ್ರ ಕಾಂಗ್ರೆಸ್ನಲ್ಲಿ ಬೆಲೆ ಇದೆ. ಲೋಕಸಭಾ ಚುನಾವಣೆಯಲ್ಲಿ ಅಪ್ಪ, ಹೆಂಡತಿ, ಮಗ, ಮಗಳು, ಆಳಿಯರಿಗೆ ಟಿಕೆಟ್ ನೀಡುವ ಮೂಲಕ ಕುಟುಂಬ ರಾಜಕಾರಣ ಮುಂದುವರಿಸಿದೆ’ ಎಂದರು.
ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನ್ಯಾಯ, ಅಕ್ರಮ ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಪಕ್ಷದ ಅಭ್ಯರ್ಥಿ ನಿರುಪಾದಿ ಕೆ.ಗೋಮರ್ಸಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಪಕ್ಷದ ಅಭ್ಯರ್ಥಿ ನಿರುಪಾದಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಜೀವನ್, ಯುವ ಘಟಕದ ರಾಜ್ಯ ಉಪಾಧ್ಯಕ್ಷೆ ಜನನಿ, ರಂಜನಿ, ಪುಷ್ಪಾ, ಸುನೀತಾ, ರಮೇಶಗೌಡ, ಜಿಲ್ಲಾ ಕಾರ್ಯದರ್ಶಿ ಗಂಗಾ ಕೆ., ಶ್ರೀಕಾಂತ್, ಅಯ್ಯಪ್ಪ ಮೇಟಿ, ಅಜೀದ್ ಪಾಷಾ, ಕೃಷ್ಣ ಸುಕಲಪೇಟೆ ಭಾಗವಹಿಸಿದ್ದರು.