ಮಾನ್ವಿ: ‘ಕಾನೂನು ಬಾಹಿರವಾಗಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳು ಹಾಗೂ ಪಡೆದಿರುವ ವ್ಯಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮಾಜಿ ಯೋಧ ಜೆಲ್ಲಿ ಆಂಜನೇಯ ನೀರಮಾನ್ವಿ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದುಳಿದ ವರ್ಗದಲ್ಲಿ ಬರುವ ಕುರುಬ ಜಾತಿಯವರು ಗೊಂಡ, ಕಾಡು ಕುರುಬ, ರಾಜಗೊಂಡ ಜಾತಿಯ ಹೆಸರಿನಲ್ಲಿ ಮತ್ತು ಕಬ್ಬಲಿಗ, ಗಂಗಾಮತಸ್ಥ ಜಾತಿಯವರು ಪರಿವಾರ, ತಳವಾರ ಹೆಸರಿನಲ್ಲಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ’ ಎಂದು ದೂರಿದರು.
‘ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಶೇ 7ರಷ್ಟು ಹೆಚ್ಚಿಸಿರುವುದನ್ನು ಅನುಷ್ಠಾನಗೊಳಿಸಬೇಕು. ಪ್ರತಿ ತಾಲ್ಲೂಕಿಗೆ ಏಕಲವ್ಯ ವಸತಿ ಶಾಲೆ ಮಂಜೂರು ಮಾಡಬೇಕು. ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಸೇರಿದಂತೆ ವಾಲ್ಮೀಕಿ ಸಮುದಾಯದ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಅವರು ಮನವಿ ಮಾಡಿದರು.