ರಾಯಚೂರು:‘ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದ್ದು, ಬರುವ ಜನವರಿ 1 ರಿಂದ ಭತ್ತ ಸೇರಿದಂತೆ ದರ ಕುಸಿತವಾಗಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದು ಕೃಷಿ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿದ ಕೃಷಿ ಮೇಳವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
‘ಸ್ವಾಮಿನಾಥನ್ ವರದಿ ಅನುಷ್ಠಾನದ ಭಾಗವಾಗಿ ಕೇಂದ್ರ ಸರ್ಕಾರವು 23 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಿದೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕಿಸಲು ರಾಜ್ಯದಿಂದಲೂ ಪಾಲು ನೀಡಲಾಗುವುದು’ ಎಂದು ತಿಳಿಸಿದರು.
‘ಕಬ್ಬು ಹಾಗೂ ಭತ್ತ ಬೆಳೆಯುವ ಪ್ರದೇಶಗಳಲ್ಲಿ ಅತಿಯಾದ ನೀರಿನ ಬಳಕೆಯಿಂದ ಭೂಮಿ ಸವುಳು–ಜವುಳಾಗುತ್ತಿದೆ. ಇಂತಹ ಭೂಮಿಗಳ ಸುಧಾರಣೆಗೆ ಕೇಂದ್ರವು ಯೋಜನೆ ರೂಪಿಸಿದೆ. ರಾಜ್ಯದಲ್ಲೂ ಮುಂದಿನ ಬಜೆಟ್ನಲ್ಲಿ ಹೊಸ ಯೋಜನೆ ಘೋಷಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು’ ಎಂದು ಹೇಳಿದರು.
ಪಶುಸಂಗೋಪನೆ ಸಚಿವ ಪ್ರಭು ಚವಾಣ, ಸಂಸದ ರಾಜಾ ಅಮರೇಶ್ವರ ನಾಯಕ ಹಾಗೂ ಶಾಸಕರು ಇದ್ದರು.