ರಾಯಚೂರು: ಜಿಲ್ಲೆಯ ವಿದ್ಯಾರ್ಥಿಗಳು ಐಎಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಬೇರೆಬೇರೆ ಜಿಲ್ಲೆಗಳಿಗೆ ಹೋಗುತ್ತಿದ್ದು, ರಾಯಚೂರಿನಲ್ಲೂ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವುದಕ್ಕೆ ಗುಣಮಟ್ಟದ ಕೇಂದ್ರವೊಂದನ್ನು ಆರಂಭಿಸಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ ಸಲಹೆ ನೀಡಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಏರ್ಪಡಿಸಿದ್ದ ಎಂ.ಪಿ. ಪ್ರಕಾಶ ಸ್ವತಂತ್ರ ಪದವಿ ಪೂರ್ವ ಕಾಲೇಜು, ಪಿಸಿಪಿಬಿ ಪದವಿ ಮಹಾವಿದ್ಯಾಲಯ, ಎಸ್.ಇಸಿಟಿ ಮಹಾವಿದ್ಯಾಲಯದ 20 ವರ್ಷದ ಸಂಭ್ರಮಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾಲೇಜುಗಳನ್ನು ಆರಂಭಿಸಿ ಈಗಾಗಲೇ ಶಿಕ್ಷಣ ಕೊಡುವ ಕೆಲಸವನ್ನು ಶರಣಬಸವ ಎಜ್ಯುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡುತ್ತಿರುವುದು ಶ್ಲಾಘನೀಯ. ಈ ಭಾಗದ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಿಗೆ ತೆರಳದಂತೆ ಸ್ಥಳೀಯವಾಗಿಯೇ ಎಲ್ಲ ರೀತಿಯ ಪರೀಕ್ಷೆಗಳನ್ನು ಎದುರಿಸುವುದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳುವಂತಾಗಬೇಕು. ಅದಕ್ಕಾಗಿ ಅಗತ್ಯ ಸಂಪನ್ಮೂಲ ಹಾಗೂ ತರಬೇತಿ ಕೊಡುವುದಕ್ಕೆ ಸಾಧ್ಯವಾದರೆ, ವಿದ್ಯಾರ್ಥಿನಿಯರು ಸೇರಿದಂತೆ ಎಲ್ಲರೂ ಸರ್ಕಾರಿ ಉದ್ಯೋಗ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗಲಿದೆ ಎಂದು ಮನವರಿಕೆ ಮಾಡಿದರು.
ಈ ಕಾಲೇಜುಗಳಲ್ಲಿ ಓದಿರುವ ಅನೇಕ ವಿದ್ಯಾರ್ಥಿಗಳು ಚಿನ್ನದ ಪದಕಗಳ ಗೌರವಕ್ಕೆ ಪಾತ್ರರಾಗಿದ್ದಾರೆ. ಬಡ ವಿದ್ಯಾರ್ಥಿಗಳಿಗೆ ಟ್ರಸ್ಟ್ನಿಂದ ಸಹಾಯ ಮಾಡುತ್ತಿದ್ದಾರೆ. ಹೀಗೆ ಸಂಸ್ಥೆಯನ್ನು ಉನ್ನತಮಟ್ಟಕ್ಕೆ ಕಟ್ಟಿ ಬೆಳೆಸಿ. ಸರ್ಕಾರದಿಂದ ಶಿಕ್ಷಣಕ್ಕೆ ಕೊಡುತ್ತಿರುವ ಅನುದಾನ ಪಡೆದು, ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸ್ನಾತಕೋತ್ತರದಲ್ಲಿ ಚಿನ್ನದ ಪದಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಾರ್ಷಿಕೋತ್ಸವ ನಿಮಿತ್ತ ಸಿದ್ಧಪಡಿಸಿದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು.
ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸಾನಿಧ್ಯವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಶರಣಬಸವ ಜೋಳದಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಯಚೂರು ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯ ಶಿವಬಸಪ್ಪ ಮಾಲಿಪಾಟೀಲ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶಿವಮೂರ್ತಿ ಹಿರೇಮಠ, ಪೂಜಾ ರಮೇಶ, ನಗರಸಭೆ ಸದಸ್ಯ ಈ.ಶಶಿರಾಜ, ಉಪನ್ಯಾಸಕ ರಮೇಶಬಾಬು, ಮುಖಂಡರಾದ ಆಂಜನೇಯ ಕಡಗೋಲ, ವೈ.ಗೋಪಾಲರೆಡ್ಡಿ, ಜನಶಿಕ್ಷಣ ಸಂಸ್ಥೆ ಅಧ್ಯಕ್ಷ ಸದಾನಂದ ಪೂಜಾರಿ, ಮಾರುತಿ ಬಡಿಗೇರ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.